ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ: ಬಿ.ವೈ. ವಿಜಯೇಂದ್ರ
ಬೆಂಗಳೂರು: ತೆಲಂಗಾಣ, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಉಸಿರಾಡುತ್ತಿದೆ. ಕರ್ನಾಟಕದಲ್ಲಿ ಅಭಿವೃದ್ಧಿ ಶೂನ್ಯ ಸ್ಥಿತಿ ಉಂಟಾಗಿದ್ದು, ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದರು.
ನಗರದ ಅರಮನೆ ಮೈದಾನದ ಗೇಟ್ ನಂ.4ರಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿದೆ ಎಂದು ಟೀಕಿಸಿದರು.
ಹಿಂದೂ ಕಾರ್ಯಕರ್ತರು ಮತ್ತು ದಲಿತರ ಹತ್ಯೆಗಳು ನಡೆಯುತ್ತಿವೆ ಎಂದು ಹೇಳಿದ ಅವರು, ಸುರತ್ಕಲ್ ಹಾಗೂ ಯಲ್ಲಾಪುರದಲ್ಲಿ ನಡೆದ ಘಟನೆಗಳನ್ನು ಉಲ್ಲೇಖಿಸಿದರು. ಯಲ್ಲಾಪುರದ ದಲಿತ ಮಹಿಳೆ ಹಾಗೂ ಕೊಪ್ಪಳದಲ್ಲಿ ದಲಿತ ವ್ಯಕ್ತಿ ಹತ್ಯೆ ಪ್ರಕರಣಗಳಲ್ಲಿ ಪರಿಹಾರ ನೀಡಲಾಗಿಲ್ಲ ಎಂದು ಆರೋಪಿಸಿದರು.
ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ದಸರಾ ಸಂದರ್ಭ ಬಾಲಕಿ ಮೇಲಿನ ಅತ್ಯಾಚಾರ-ಹತ್ಯೆ ಪ್ರಕರಣವನ್ನು ನೆನಪಿಸಿದ ಅವರು, “ಕಾವೇರಿ ನದಿಯ ಉಗಮಸ್ಥಾನ ಮೈಸೂರು ಮಾದಕವಸ್ತುಗಳ ಉಗಮಸ್ಥಾನವಾಗಿದೆ” ಎಂದು ಆಕ್ಷೇಪಿಸಿದರು.
ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ ವಿಜಯೇಂದ್ರ, ಮುಂದಿನ ದಿನಗಳಲ್ಲಿ ಅನೇಕ ಚುನಾವಣೆಗಳು ಎದುರಾಗಲಿವೆ ಎಂದರು. ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಜಿಬಿಎ ಚುನಾವಣೆಯ ಜೊತೆಗೆ ವಿಧಾನಸಭೆಯ ಎರಡು ಉಪಚುನಾವಣೆಗಳು ನಡೆಯಲಿವೆ. ಬಾಗೇಪಲ್ಲಿ ಉಪಚುನಾವಣೆ ಸಹ ಸೇರಿ ಮುಂದಿನ ಆರೇಳು ತಿಂಗಳಲ್ಲಿ ಸರಣಿ ಚುನಾವಣೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.






