ಆಪರೇಷನ್ ಸಿಂಧೂರ: ರಾಜ್ಯದ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಮಾಡಲು ಜಮೀರ್ ಸೂಚನೆ
ಬೆಂಗಳೂರು: ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗೆ ಶ್ಲಾಘನೆ ವ್ಯಕ್ತವಾಗುತ್ತಿದ್ದು, ಬೆಂಗಳೂರಿನಲ್ಲಿ ಸಂಭ್ರಮ ಮನೆ ಮಾಡಿದೆ. ಈ ನಿಟ್ಟಿನಲ್ಲಿ ನಮ್ಮ ದೇಶದ ಮೂರು ಸಶಸ್ತ್ರ ಪಡೆಗಳ ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ರಾಜ್ಯಾದ್ಯಂತ ಎಲ್ಲಾ ಮಸೀದಿಗಳಲ್ಲಿ ನಾಳೆ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸಚಿವ ಬಿ ಝಡ್ ಜಮೀರ್ ಅಹ್ಮದ್ ಅವರು ವಕ್ಫ್ ಬೋರ್ಡ್ ಸಿಇಒಗೆ ಪತ್ರದ ಮೂಲಕ ಸೂಚನೆ ನೀಡಿದ್ದಾರೆ.
ಪಹಲ್ಗಾಮ್ನಲ್ಲಿ ಉಗ್ರರ ದಾಳಿ ಹಿನ್ನೆಲೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತದ ಸೈನಿಕರ ಶ್ರೇಯಸ್ಸು ಮತ್ತು ಶಕ್ತಿ ತುಂಬಲು ವಕ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿ ಎಲ್ಲಾ ಮಸೀದಿಗಳಲ್ಲಿ ನಾಳೆ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ತಿಳಿಸಲಾಗಿದೆ.
ರಾಜ್ಯದ ಮುಜುರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಭಾರತೀಯ ಸೇನೆ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಸುತ್ತೋಲೆ ಹೊರಬಿದ್ದ ಬೆನ್ನಲ್ಲೇ ಮಸ್ಲಿಮರಿಗೂ ಸಹ ಮಸೀದಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಹೇಳಬೇಕೆಂಬ ಕೂಗು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಸೂಚನೆ ನೀಡಿದ್ದಾರೆ.