ಇದು ಮೂರ್ಖತನದ ನಿರ್ಧಾರ: ಉಚ್ಚಾಟನೆಗೆ ಕಾಂಗ್ರೆಸ್ ವಿರುದ್ಧ ಅಫ್ರೀನ್ ಖಾನ್ ಆಕ್ರೋಶ
ಬೆಂಗಳೂರು: ಯುವ ಕಾಂಗ್ರೆಸ್ ಬೆಂಗಳೂರು ಉತ್ತರ ಜಿಲ್ಲಾ ಉಪಾಧ್ಯಕ್ಷೆಯಾಗಿದ್ದ ಅಫ್ರೀನ್ ಖಾನ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ದಾವಣಗೆರೆ ಉಪಚುನಾವಣೆಗೆ ಸಂಬಂಧಿಸಿದಂತೆ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಟೀಕಾತ್ಮಕ ಪೋಸ್ಟ್ ಹಂಚಿಕೊಂಡ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಯೂತ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಅವರು ಉಚ್ಚಾಟನೆ ಆದೇಶ ಹೊರಡಿಸಿದ್ದಾರೆ.
ಈ ಕ್ರಮಕ್ಕೆ ಪ್ರತಿಕ್ರಿಯಿಸಿದ ಅಫ್ರೀನ್ ಖಾನ್, “ನಾನು ಏಪ್ರಿಲ್ 4ರಂದೇ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದೆ. ಈಗ ಉಚ್ಚಾಟನೆ ಮಾಡಿರುವುದು ಅರ್ಥಹೀನ ನಿರ್ಧಾರ” ಎಂದು ಹೇಳಿದ್ದಾರೆ.
ಉಚ್ಚಾಟನೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದ ಅವರು, “ಮುಸ್ಲಿಂ ನಾಯಕರನ್ನು ಏಕೆ ಟಾರ್ಗೆಟ್ ಮಾಡಲಾಗುತ್ತಿದೆ ತಿಳಿದಿಲ್ಲ. 2028ರ ಚುನಾವಣೆಯಲ್ಲಿ ಜನ ಉತ್ತರ ಕೊಡುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ, ಕಾಂಗ್ರೆಸ್ ವಿರುದ್ಧ ಸರಣಿ ಪೋಸ್ಟ್ಗಳನ್ನು ಹಾಕಿ ಅಸಮಾಧಾನ ವ್ಯಕ್ತಪಡಿಸಿದ ಅವರು, ಪಕ್ಷದಲ್ಲಿ ಮುಸ್ಲಿಂ ನಾಯಕರನ್ನು ಕ್ರಮೇಣ ಬದಲಾಯಿಸುತ್ತಾ ಬಂದಿದ್ದಾರೆ ಎಂದು ಆರೋಪಿಸಿದರು. ಆದರೆ ಜಮೀರ್ ಅಹ್ಮದ್ ಖಾನ್ ಅವರನ್ನು ಯಾರೂ ಮುಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.



