No menu items!
13.9 C
Munich
Wednesday, April 29, 2026

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಾ? ಇಲ್ವಾ? ಹಾಸ್ಟೆಲ್‌ನಲ್ಲಿ ಇರೋ ಮಕ್ಕಳ ಕಥೆ ಏನು?

Must read

ಲಾಕ್‍ಡೌನ್ ಸಡಿಲಗೊಳ್ಳುತ್ತಿರುವ ಹೊತ್ತಿನಲ್ಲೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಅವಶ್ಯಕ ಸಿದ್ಧತೆ ಮಾಡಿಕೊಳ್ಳುವಂತೆ ಡಿಡಿಪಿಐಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್ ಫೇಸ್‍ಬುಕ್ ಲೈವ್‍ ಮೂಲಕ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಕುರಿತು ಮಾತನಾಡಿದ್ದಾರೆ. ನಾನು ವಿದ್ಯಾರ್ಥಿಗಳ ಜೊತೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಮಾಡಿದ್ದೇನೆ. ಆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗಾಗಿ ಒಂದು ವರ್ಷಪೂರ್ತಿ ಪರಿಶ್ರಮಪಟ್ಟಿರುವುದರಿಂದ ಪರೀಕ್ಷೆ ನಡೆಸಲೇಬೇಕು ಎಂದು ಒತ್ತಾಯಿಸಿದ್ದಾರೆ. ಹೀಗಾಗಿ ನಮ್ಮ ರಾಜ್ಯದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾಡಲು ತಯಾರಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಎಲ್ಲಾ ಉಪನಿರ್ದೇಶಕರೊಂದಿಗೆ ವಿಡಿಯೋ ಸಂವಾದ ನಡೆಸಲಾಗಿದೆ. ಪ್ರಸ್ತುತ ದೂರದರ್ಶನದ ಮುಖೇನ ವಿದ್ಯಾರ್ಥಿಗಳಿಗೆ ಪುನರ್ ಮನನ ತರಗತಿಗಳನ್ನು ನಡೆಸಲಾಗುತ್ತಿದೆ. ಇದಕ್ಕೆ ಮಕ್ಕಳಿಂದ ಸಕಾರಾತ್ಮಕ ಪ್ರತಿಕ್ರಿಯೆ ಲಭಿಸಿದ್ದು‌ ಮಕ್ಕಳು ಬಹಳ ಸಂತಸಗೊಂಡಿದ್ದಾರೆ. ಗಣಿತ ಮತ್ತು ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಮಾದರಿ ಪ್ರಶ್ನೆ ಪತ್ರಿಕೆಯನ್ನು ಬೋಧಿಸಲಾಗುತ್ತಿದೆ. ಇಂಗ್ಲಿಷ್ ಮಾಧ್ಯಮ ವಿದ್ಯಾರ್ಥಿಗಳಿಗೂ ಪರೀಕ್ಷೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಜೂನ್ ತಿಂಗಳಲ್ಲಿ ಬೋಧನೆ ಮಾಡಲು ನಿರ್ಧರಿಸಲಾಗಿದೆ ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸಂದೇಶಗಳಿಗೆ, ಅಲ್ಲಿ ಪ್ರಕಟಗೊಳ್ಳುವ ದಿನಾಂಕಕ್ಕೆ ವಿದ್ಯಾರ್ಥಿಗಳು ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಪುನರ್ ಮನನ ತರಗತಿಗಳು ನಡೆದ ನಂತರ ಜೂನ್ ತಿಂಗಳಲ್ಲಿ ಪರೀಕ್ಷೆ ಮಾಡುವ ನಿರ್ಧಾರ ಮಾಡುತ್ತೇವೆ. ಈಗ ಪರೀಕ್ಷೆ ಮಾಡುವುದಾದರೂ ತಕ್ಷಣವೇ ಪರೀಕ್ಷೆ ಮಾಡುವುದಿಲ್ಲ. ಶಿಕ್ಷಣ ಇಲಾಖೆ ಘೋಷಣೆ ಮಾಡುವ ವೇಳಾಪಟ್ಟಿ ಅತ್ಯಂತ ಸ್ಪಷ್ಟವಾಗಿರಲಿದೆ. ವೇಳಾಪಟ್ಟಿ ಘೋಷಣೆ ಮಾಡಿದ ಮೇಲೆ ಕನಿಷ್ಠ 15 ರಿಂದ 20 ದಿನ ವಿದ್ಯಾರ್ಥಿಗಳಿಗೆ ಓದಲು ಸಮಯ ಸಿಗಲಿದೆ ಎಂದು ಸುರೇಶ್ ಕುಮಾರ್ ಹೇಳಿಸಿದ್ದಾರೆ.

ಪರೀಕ್ಷಾ ಕೊಠಡಿಯಲ್ಲಿ ಸಾಮಾನ್ಯವಾಗಿ 24 ಜನ ಕೂರಲಿದ್ದಾರೆ. ಆದರೆ ಈ ಪರೀಕ್ಷೆಯಲ್ಲಿ ಪ್ರತಿ ಕೊಠಡಿಯಲ್ಲಿ ಕೂರುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಮಾಡಲಿದ್ದೇವೆ. ಪರೀಕ್ಷೆ ಬರೆಯುವಾಗ ಮಾಸ್ಕ್ ಧರಿಸುವುದು ಕಡ್ಡಾಯ. ಪರೀಕ್ಷೆಗೂ ಮುನ್ನ ಸ್ಯಾನಿಟೈಸರ್ ಬಳಕೆ ಮಾಡುವುದು ಕಡ್ಡಾಯ. ಎಲ್ಲಾ ವಿದ್ಯಾರ್ಥಿಗಳಿಗೆ ಥರ್ಮರ್ ಸ್ಕ್ಯಾನರ್ ಮೂಲಕ ತಪಾಸಣೆ ಮಾಡಲಾಗುತ್ತೆ. ಪರೀಕ್ಷೆ ಮುನ್ನ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳಲಾಗುತ್ತದೆ. ಇದಕ್ಕೆ ನಮ್ಮ ಇಲಾಖೆ ಸಿದ್ಧವಾಗುತ್ತಿದೆ. ಹಾಸ್ಟೆಲ್‍ನಲ್ಲಿ ಇದ್ದವರು ಊರಿಗೆ ಹೋಗಿದ್ರೆ ಅಂತಹ ವಿದ್ಯಾರ್ಥಿಗಳಿಗೆ ಅವರ ಊರಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕೊಡಲಾಗುತ್ತದೆ. ಜೂನ್ ಎರಡನೇ ವಾರ ಅಥವಾ ಮೂರನೇ ವಾರ ಪರೀಕ್ಷೆ ಮಾಡುವ ಚಿಂತನೆ ಇದೆ. ಈ ಬಗ್ಗೆ ಈಗಾಗಲೇ ಸಿದ್ಧತೆ ಆರಂಭ ಮಾಡಿದ್ದೇವೆ ಎಂದು ಹೇಳಿದರು.

ಈ ಮೂಲಕ ರಾಜ್ಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಲ್ಲಿ ಮನೆಮಾಡಿದ್ದ ಗೊಂದಲಕ್ಕೆ ಶಿಕ್ಷಣ ಸಚಿವರು ತೆರೆ ಎಳೆದಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article