ನಿನ್ನೆ ಖಾಸಗಿ ಹೋಟೆಲ್ ನಲನ ನಡೆದ ಮಹತ್ವದ ಸಭೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರುಗಳು ಪಾಲ್ಗೊಂಡಿದ್ದರೂ ಅದರಲ್ಲಿ ಕಾಂಗ್ರೆಸ್ನಲ್ಲಿ ಬಂಡಾಯದ ಹೊಗೆ ನಿಧಾನವಾಗಿ ಕಾವೇರುವಂತಿತ್ತು,
ರಾಜ್ಯ ನಾಯಕರುಗಳು ಮತ್ತೊಂದು ಸುತ್ತಿನ ಚರ್ಚೆ ನಡೆಸಿ ಕ್ಷೇತ್ರ ಹಂಚಿಕೆಯಲ್ಲಾಗಿರುವ ವ್ಯತ್ಯಾಸಗಳನ್ನು ಸರಿಪಡಿಸುತ್ತಾರೆ ಎಂಬ ನಿರೀಕ್ಷೆಗಳಿತ್ತು. ಆದರೆ ನಿನ್ನೆ ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಭಾಗಿಯಾಗಿದ್ದ ಜೆಡಿಎಸ್-ಕಾಂಗ್ರೆಸ್ ನಾಯಕರು ಕ್ಷೇತ್ರಗಳ ಹಂಚಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬ ಸ್ಪಷ್ಟ ನಿರ್ಧಾರ ತೆಗೆದುಕೊಂಡಿದ್ದಾರೆ.
ತುಮಕೂರಿನಲ್ಲಿ ಹಾಲಿ ಸಂಸದ ಮುದ್ದಹನುಮೇಗೌಡರಿಗೆ ಅನ್ಯಾಯವಾಗಿದ್ದು, ಅವರು ಎಲ್ಲಾ ನಾಯಕರುಗಳ ಮನೆ ಬಾಗಿಲಿಗೆ ಎಡತಾಕಿ ಕೊನೆಗೆ ನೇಪಥ್ಯಕ್ಕೆ ಸರಿದಿದ್ದಾರೆ. ಅವರಿಗೆ ಮತ್ತೆ ಟಿಕೆಟ್ ಕೊಡಿಸಲು ಪ್ರಯತ್ನಿಸಿ ಪರಮೇಶ್ವರ್ ಕೂಡ ಕೈಚೆಲ್ಲಿದಂತಿದೆ.
ಕಾಂಗ್ರೆಸ್ ಹೈಕಮಾಂಡ್ನ ನಿರ್ಧಾರವನ್ನೂ ಧಿಕ್ಕರಿಸಿ ಬಂಡಾಯವಾಗಿ ಕಣಕ್ಕಿಳಿಯುವ ಮಾತುಗಳು ತುಮಕೂರಿನಲ್ಲಿ ಕೇಳಿ ಬರುತ್ತಿದೆ. ಕೆ.ಎನ್.ರಾಜಣ್ಣ ಹಾಗೂ ಇತರರು ಬಂಡಾಯವಾಗಿ ಸ್ಪರ್ಧಿಸುವ ಮಾತುಗಳನ್ನಾಡಿದ್ದಾರೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಜೆಡಿಎಸ್ಗೆ ಅಭ್ಯರ್ಥಿಗಳೇ ಇಲ್ಲವಾಗಿದ್ದು, ಬಿಜೆಪಿಯಿಂದ ಶೋಭಾಕರಂದ್ಲಾಜೆಗೆ ಟಿಕೆಟ್ ನೀಡಲು ಹೈಕಮಾಂಡ್ ಹಿಂದೇಟು ಹಾಕಿದೆ. ಈ ಹಂತದಲ್ಲಿ ಕಾಂಗ್ರೆಸ್ನಿಂದ ಮಾಜಿ ಸಚಿವ ಪ್ರಮೋದ್ಮಧ್ವರಾಜ್ ಅವರನ್ನು ಕಣಕ್ಕಿಳಿಸಿದರೆ, ಗೆಲ್ಲುವ ಸಾಧ್ಯತೆ ಇತ್ತು ಎಂಬ ಚರ್ಚೆಗಳು ನಡೆದಿವೆ.
ಜೆಡಿಎಸ್ ಜಯಪ್ರಕಾಶ್ ಹೆಗ್ಡೆ ಅವರನ್ನು ಕರೆತಂದು ಕಣಕ್ಕಿಳಿಸುವ ಪ್ರಯತ್ನ ನಡೆಸಿವೆ. ಆದರೆ ಅದು ಎಷ್ಟರಮಟ್ಟಿಗೆ ಫಲ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ. ಈ ಎಲ್ಲಾ ಪ್ರಹಸನಗಳಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್ ನಾಯಕರು ಬಂಡಾಯವಾಗಿ ಕಣಕ್ಕಿಳಿಯುವ ತಯಾರಿಯಲ್ಲಿದ್ದಾರೆ.
ಮಂಗಳೂರಿನಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಲು ಒತ್ತಾಯಗಳು ಕೇಳಿ ಬರುತ್ತಿವೆ. ಆದರೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರಕುಮಾರ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ. ಇಲ್ಲಿಯೂ ಬಂಡಾಯದ ಬಿಸಿ ಹೆಚ್ಚಾಗಿದೆ.