ಕಾಂಗ್ರೆಸ್ ಸರ್ಕಾರದ ನಡೆ ಹಿಟ್ಲರ್ ಆಡಳಿತಕ್ಕಿಂತಲೂ ಕಡೆಯಾಗಿದೆ‌: ಜೋಶಿ!

tnit editors
1 Min Read

ಕಾಂಗ್ರೆಸ್ ಸರ್ಕಾರದ ನಡೆ ಹಿಟ್ಲರ್ ಆಡಳಿತಕ್ಕಿಂತಲೂ ಕಡೆಯಾಗಿದೆ‌: ಜೋಶಿ!

ಬೆಂಗಳೂರು:- ಕಾಂಗ್ರೆಸ್ ಸರ್ಕಾರದ ನಡೆ ಹಿಟ್ಲರ್ ಆಡಳಿತಕ್ಕಿಂತಲೂ ಕಡೆಯಾಗಿದೆ‌ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಈ ಸಂಬಂಧ X ಮಾಡಿರುವ ಅವರು, ಕರ್ನಾಟಕ ರಾಜ್ಯದಲ್ಲಿ‌ ಹಿಟ್ಲರ್ ಆಡಳಿತ ಜಾರಿಗೆ ಬಂದಿದೆಯಾ ಎಂಬ ಪ್ರಶ್ನೆ ಬಿಟ್ಟುಬಿಡದೆ ಕಾಡುತ್ತಿದೆ. ಸಂವಿಧಾನದ ಕುರಿತು, ಡಾ ಬಾಬಾ ಸಾಹೇಬರ ಬಗ್ಗೆ, ಅವರ ನೀತಿಗಳನ್ನು ಪಾಲಿಸುತ್ತೇವೆ ಎಂದು ಹೇಳುವ ಕಾಂಗ್ರೆಸ್ ಸರ್ಕಾರದ ನಡೆ ಹಿಟ್ಲರ್ ಆಡಳಿತಕ್ಕಿಂತಲೂ ಕಡೆಯಾಗಿದೆ‌. ವಾಕ್ ಸ್ವತಂತ್ರ ಕಿತ್ತುಕೊಳ್ಳುವುದು ಸಂವಿಧಾನದಲ್ಲಿ ಬರೆದಿದೆಯಾ ಸಿಎಂ ಸಿದ್ದರಾಮಯ್ಯನವರೇ? ನಿಮ್ಮ ಸರ್ಕಾರದ ವೈಫಲ್ಯಗಳ ಬಗ್ಗೆ ಮಾತನಾಡಿದರೆ ನಿಮಗೆ ಯಾಕೆ ಸಂಕೋಚ ಡಿಕೆ ಶಿವಕುಮಾರ್ ರವರೇ? ನಿಮ್ಮ‌ ಸರ್ಕಾರದ ದುರಾಡಳಿತವನ್ನು, ಭ್ರಷ್ಟತೆಯನ್ನು, ಸುಭಿಕ್ಷವಾಗಿದ್ದ ರಾಜ್ಯದ ಆರ್ಥಿಕತೆಯನ್ನು ಹಾಳು ಮಾಡಿದ್ದನ್ನು, ಮಿತಿಮೀರಿದ ಓಲೈಕೆ ರಾಜಕಾರಣದ ಬಗ್ಗೆ ಮಾತನಾಡಿದರೆ ನಿಮಗೆ ಏಕೆ ಭಯ?

ಖಾಸಗಿ ನ್ಯೂಸ್ ಚಾನೆಲ್ ಮುಖ್ಯಸ್ಥರನ್ನು ಬಂಧಿಸಲು ಕರ್ನಾಟಕದ ಪೊಲೀಸರನ್ನು ಕಳುಹಿಸಿರುವುದು ಯಾವ ಸಂದೇಶ ನೀಡುವುದಕ್ಕಾಗಿ? ನಿಮ್ಮ‌ ಸರ್ಕಾರದ ವೈಫಲ್ಯ ಮುಚ್ಚಿಸಿಡಲು, ನಿಮ್ಮ ಆತಂಕ, ದುಗುಡ ಈ ಆದೇಶದಲ್ಲಿ ಭಾಸವಾಗುತ್ತಿದೆ. ಸಿಎಂ ಕುರ್ಚಿ ಉಳಿಸಿಕೊಳ್ಳಲು ಈ ಮಾರ್ಗವನ್ನು ಹಿಡಿದಿರುವಂತೆ ಕಾಣುತ್ತಿದೆ‌ ಸಿದ್ದರಾಮಯ್ಯನವರೇ! ನಿಮ್ಮ‌ ಹತಾಶೆ ನಮಗೆ ಅರ್ಥವಾಗುತ್ತಿದೆ. ಆದರೆ, ಈ ಹಿಟ್ಲರ್ ಆಡಳಿತದ ಪದ್ದತಿ, ಮೊಘಲರ ಆಡಳಿತದ ಪದ್ದತಿಯನ್ನು ಕರ್ನಾಟಕ ಎಂದಿಗೂ ಸಹಿಸುವುದಿಲ್ಲ’ ಎಂದು ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ.

ಇನ್ನೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬಗ್ಗೆ ತಪ್ಪು ಹಾಗೂ ತಿರುಚಿದ ಮಾಹಿತಿ, ಸುಳ್ಳು ಸಂಗತಿ ಅಳವಡಿಸಿ ಬಿಜೆಪಿ ಸುಳ್ಳು ಪ್ರಚಾರ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ವಿಚಾರವಾಗಿ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವಂತೆ ಕಾಂಗ್ರೆಸ್ ಸರ್ಕಾರ ಒಳಾಡಳಿತ ಇಲಾಖೆ ಅಧಿಸೂಚನೆ ಹೊರಡಿಸಿದೆ. ಈ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article