ಬೆಂಗಳೂರು: ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿಲ್ಲ, ನಡೆಯುವುದು ಇಲ್ಲ ಎಂದು ಟೀಕಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ನವರದು ನುಡಿದಂತೆ ನಡೆದ ಸರ್ಕಾರ ಅಲ್ಲ. ಸರ್ಕಾರವು 6 ತಿಂಗಳ ಆಡಳಿತದ ಕೊಟ್ಟಿರುವ ಅಂಕಿ – ಅಂಶಗಳು ಪ್ರಶ್ನಾರ್ಥಕವಾಗಿವೆ ಎಂದರು.
ರಾಜ್ಯದ ಕಾಂಗ್ರೆಸ್ ಸರ್ಕಾರವು ಚುನಾವಣೆ ಸಂದರ್ಭದಲ್ಲಿ ಜನರಿಗೆ 5 ಗ್ಯಾರಂಟಿಗಳನ್ನು ನೀಡಿತ್ತು. ಕೊಟ್ಟ ಮಾತಿನಂತೆ ಅಥವಾ ನುಡಿದಂತೆ ನಡೆದಿದ್ದೇವೆ ಎಂದು ನಿನ್ನೆ ದೊಡ್ಡ ದೊಡ್ಡ ಜಾಹೀರಾತು ನೀಡಿದ್ದಾರೆ. ಅಂಕಿ – ಅಂಶಗಳನ್ನೂ ಕೊಟ್ಟಿದ್ದಾರೆ. ಆದರೆ, ಎಷ್ಟೋ ಜನರಿಗೆ ಅಕ್ಕಿಗೆ ಕೊಡುವ ಹಣ ಸಿಕ್ಕಿಲ್ಲ. ಮಹಿಳೆಯರಿಗೆ 2 ಸಾವಿರ ರೂಪಾಯಿ ಒಂದು ಕಂತು ಮಾತ್ರ ಸಿಕ್ಕಿದೆ. ಇನ್ನೂ 3 ತಿಂಗಳು ಬಂದಿಲ್ಲ. ವಿದ್ಯುತ್ 200 ಯೂನಿಟ್ ಎಂದಿದ್ದರು. 200 ಯೂನಿಟ್ ಬದಲು ವರ್ಷದ ಸರಾಸರಿ ಯೂನಿಟ್ ಕೊಡುತ್ತಿದ್ದಾರೆ. ಯುವನಿಧಿ ಇನ್ನೂ ಪ್ರಾರಂಭಿಸಿಲ್ಲ ಎಂದು ಹರಿಹಾಯ್ದರು.