ಕಾಲ್ತುಳಿತ ಸಾವು ಪ್ರಕರಣ: ಬೆಳಗಾವಿ ಕುಟುಂಬದವರಿಗೆ ಪರಿಹಾರ ವಿತರಣೆ

tnit editors
1 Min Read

ಕಾಲ್ತುಳಿತ ಸಾವು ಪ್ರಕರಣ: ಬೆಳಗಾವಿ ಕುಟುಂಬದವರಿಗೆ ಪರಿಹಾರ ವಿತರಣೆ

ಬೆಳಗಾವಿ: ಪ್ರಯಾಗರಾಜ್ ಮಹಾಕುಂಭಮೇಳದಲ್ಲಿ ಕಾಲ್ತುಳಿತದಲ್ಲಿ ಬೆಳಗಾವಿ ನಾಲ್ವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಸ್ಥರಿಗೆ ಉತ್ತರ ಪ್ರದೇಶ ಸರ್ಕಾರದಿಂದ ಪರಿಹಾರ ವಿತರಣೆ ಮಾಡಲಾಗಿದೆ. ಉತ್ತರ ಪ್ರದೇಶ ಸರ್ಕಾರದಿಂದ ಬೆಳಗಾವಿ ಡಿಸಿ ಅಕೌಂಟ್ ಗೆ ನಾಲ್ವರಿಗೆ ತಲಾ 25 ಲಕ್ಷದಂತೆ 1 ಕೋಟಿ ಪರಿಹಾರ ವಿತರಣೆ ಮಾಡಲಾಗಿದೆ. ಬೆಳಗಾವಿ ಮೂಲದ ಜ್ಯೋತಿ‌ ಹತ್ತರವಾಠ, ಮೇಘಾ ಹತ್ತರವಾಠ,
ಅರುಣ ಕೋಪರ್ಡೆ ಹಾಗೂ ಮಹಾದೇವಿ ಬಾವನೂರ ಕುಂಭಮೇಳದಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮೃತಪಟ್ಟಿದ್ದರು. ಘಟನೆ ಸಂಭವಿಸಿದ 40 ದಿನಗಳ ಬಳಿಕ ಉತ್ತರ ಪ್ರದೇಶ ಸರ್ಕಾರದಿಂದ ಪರಿಹಾರದ ಹಣ ವಿತರಣೆ ಮಾಡಲಾಗಿದೆ. ಇತ್ತ ಕರ್ನಾಟಕ ಸರ್ಕಾರದಿಂದಲೂ ಪರಿಹಾರ ನೀಡುವಂತೆ ವರದಿ ರವಾನೆ ಮಾಡಲಾಗಿದೆ ಎಂದು ಬೆಳಗಾವಿ ಡಿಸಿ ಮೊಹಮ್ಮದ್‌ ರೋಷನ್ ತಿಳಿಸಿದ್ದಾರೆ.
ಜನವರಿ 29 ರಂದು, ಪ್ರಯಾಗ್ರಾಜ್ನಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 30 ಜನರು ಮೃತಪಟ್ಟಿದ್ದರು ಮತ್ತು ನೂರಾರು ಮಂದಿ ಗಾಯಗೊಂಡಿದ್ದರು. ಮೌನಿ ಅಮಾವಾಸ್ಯಾ ದಿನದಂದು ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಹೆಚ್ಚಿನ ಸಂಖ್ಯೆಯ ಯಾತ್ರಿಕರು ಪ್ರಯಾಗ್ರಾಜ್ಗೆ ಬಂದಿದ್ದರು. ಆ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿತ್ತು. ಪ್ರತ್ಯಕ್ಷದರ್ಶಿಗಳ ಪ್ರಕಾರ,
ಜನರು ಬ್ಯಾರಿಕೇಡ್‌ ತಡೆಗಳನ್ನು ಧಿಕ್ಕರಿಸಿ ನದಿಯ ಕಡೆಗೆ ಹೋಗಲು ಪ್ರಯತ್ನಿಸಿದ್ದರು, ಇದರಿಂದಾಗಿ ಕಾಲ್ತುಳಿತ ಸಂಭವಿಸಿತ್ತು. ದುರಂತದಲ್ಲಿ ಸಾವನ್ನಪ್ಪಿದ ಪ್ರತಿಯೊಬ್ಬರ ಕುಟುಂಬಗಳಿಗೆ ರಾಜ್ಯ ಸರ್ಕಾರದ ಪರವಾಗಿ ನಾವು ತಲಾ 25 ಲಕ್ಷ ರೂ.ಗಳ ಆರ್ಥಿಕ ಸಹಾಯವನ್ನು ನೀಡಲಿದ್ದೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಣೆ ಮಾಡಿದ್ದರು.

Share This Article