ಕುಮಾರಸ್ವಾಮಿ ಪರ ಪ್ರತಾಪ್ ಸಿಂಹ ಬ್ಯಾಟಿಂಗ್

admin
1 Min Read

ಮೈಸೂರು: ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಮಧ್ಯೆ ತೀವ್ರ ವಾಗ್ವಾದಗಳು ನಡೆಯುತ್ತಿದೆ. ಈ ನಡುವೆ ಸಂಸದ ಪ್ರತಾಪ್ ಸಿಂಹ ಅವರು ಹೆಚ್‍ಡಿಕೆ ಪರ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಸಂಸದೆಗೆ ಟಾಂಗ್ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್‍ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ ಎಂದು ಅಧಿಕಾರಿಗಳೇ ತಿಳಿಸಿದ್ದಾರೆ. ಅಂಥಹದರಲ್ಲಿ ಡ್ಯಾಂ ಬಿರುಕು ಬಿಟ್ಟಿದೆ ಅನ್ನೋದು ಸರಿಯಲ್ಲ ಎಂದು ಪರೋಕ್ಷವಾಗಿ ಸಂಸದೆಗೆ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.


ಅಕ್ರಮ ಗಣಿಗಾರಿಕೆ ಸ್ಥಳಗಳಲ್ಲಿ ಸುಮಲತಾಗೆ ಅಡ್ಡಿ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ಅವರ ಹೇಳಿಕೆಯನ್ನೇ ಮಾಧ್ಯಮದವರು ಸತ್ಯ ಎಂದು ಭಾವಿಸಬೇಡಿ. ಸತ್ಯದ ಆಳಕ್ಕೆ ಹೋಗಿ ತಿಳಿದುಕೊಳ್ಳುವ ಮನಸ್ಥಿತಿ ಮಾಧ್ಯಮದವರಿಗೆ ಇರಬೇಕಾಗುತ್ತದೆ. ರಾಜಕೀಯವಾಗಿ ಯಾರೇ ಏನ್ ಬೇಕಾದರೂ ಹೇಳಿಕೆ ಕೊಡಬಹುದು. ಯಾರು ಕೂಡ ಎಲ್ಲಿಯೂ ಅಡ್ಡಿ ಪಡಿಸಿಲ್ಲ. ಇದೊಂದು ರಾಜಕೀಯ ಅಷ್ಟೇ ಎಂದು ಸಿಂಹ ಲೇವಡಿ ಮಾಡಿದರು.
ಕೆ ಆರ್ ಎಸ್ ಅಧಿಕಾರಿಗಳ ಜೊತೆ ನಾನು ಮಾತನಾಡಿದ್ದೇನೆ. ಅಲ್ಲಿ ಯಾವುದು ಸಮಸ್ಯೆ ಇಲ್ಲ. ಈ ಹಿಂದೆಯೂ ಕೂಡ ಮೈಸೂರು-ಬೆಂಗಳೂರು ದಶಪಥ ರಸ್ತೆ ಮಾಡುವುದಕ್ಕೂ ಬಿಡಲಿಲ್ಲ. ಸುಳ್ಳು ನೆಪಗಳನ್ನ ಹೇಳಿ ಕೆಲಸ ಮಾಡಲು ಅಡ್ಡಿಪಡಿಸಿದ್ರು ಎಂದು ಪರೋಕ್ಷವಾಗಿ ಸುಮಲತಾ ವಿರುದ್ದ ಪ್ರತಾಪ್ ಸಿಂಹ ಆರೋಪ ಮಾಡಿದರು.
ಶ್ರೀರಂಗಪಟ್ಟಣ ತಾಲೂಕಿನ ಚೆನ್ನನಕೆರೆ ಮತ್ತು ಹಂಗರಹಳ್ಳಿಯಲ್ಲಿ ನಡೆಯುತ್ತಿದ್ದ ಗಣಿಗಾರಿಕೆ ವೀಕ್ಷಣೆಗೆ ಹೋಗದಂತೆ ಅಡ್ಡಿಪಡಿಸಿದ್ದನ್ನು ನೋಡಿ ಸುಮಲತಾ, ಇದೇನ್ ಭಾರತ-ಪಾಕಿಸ್ತಾನ ಗಡಿನಾ ಎಂದು ಆಘಾತ ವ್ಯಕ್ತಪಡಿಸಿದ್ದರು. ಗಣಿಗಾರಿಕೆಯಿಂದ ಬಿರುಕು ಬಿಟ್ಟಿರುವ ಊರವರ ಮನೆಗಳನ್ನು ನೋಡಿ ಶಾಕ್ ಆದರು. ಅಕ್ರಮ ಗಣಿಗಾರಿಕೆ ಬಗ್ಗೆ ಮಾತಾಡುವ ವೇಳೆ ವಿಷಯವನ್ನು ಬೇರೆಡೆಗೆ ತಿರುಗಿಸುವ ಯತ್ನ ಮಾಡಲಾಗ್ತಿದೆ…? ಶಾಸಕರಿಗೆ ನಿಮ್ಮ ಕೊಡುಗೆ ಏನು..? ನಿಮ್ಮ ಕಣ್ಣ ಮುಂದೆಯೇ ಇಷ್ಟು ಭ್ರಷ್ಟಾಚಾರ, ಅನ್ಯಾಯ ನಡೆಯುತ್ತಿದ್ದರೂ ಏಕೆ ಸುಮ್ಮನಿದ್ದೀರಿ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯಗೆ ತಿರುಗೇಟು ನೀಡಿದ್ದರು.

Share This Article
Leave a Comment