ಕೇಂದ್ರಕ್ಕಿಂತ ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಚಿಕ್ಕಮಗಳೂರು: ಜನಕಲ್ಯಾಣಕ್ಕೆ ಒತ್ತಾಸೆಯಾಗಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳೂ ಒಂದು ವಿಧದ ಅಭಿವೃದ್ಧಿಯಾಗಿದ್ದು, ಗ್ಯಾರಂಟಿಗಳ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಕೇಂದ್ರಕ್ಕಿಂತ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಚಿಕ್ಕಮಗಳೂರಿನ ಹಂದೂರು ಗ್ರಾಮದಿಂದ ನರಸಿಂಹರಾಜಪುರಕ್ಕೆ ಸಂಪರ್ಕಿಸುವ ಭದ್ರಾ ಹಿನ್ನೀರಿನಲ್ಲಿ ನಿರ್ಮಿಸಿರುವ ಸೇತುವೆ ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಶಂಕುಸ್ಥಾಪನೆ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಇಂದು 36 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸೇತುವೆಯೂ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಇಂದು ಚಾಲನೆ ನೀಡಲಾಗಿದೆ. ವಿರೋಧಪಕ್ಷದವರು ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ , ಗ್ಯಾರಂಟಿಗಳ ನಂತರ ಖಜಾನೆ ಖಾಲಿಯಾಗಿವೆ, ಅಭಿವೃದ್ಧಿ ಶೂನ್ಯ ಎಂದು ಟೀಕಿಸುತ್ತಾರೆ. ಆದರೆ ಗ್ಯಾರಂಟಿಗಳ ಜೊತೆಗೆ ಅಭಿವೃದ್ಧಿಯನ್ನೂ ನಮ್ಮ ಸರ್ಕಾರ ಸಾಧ್ಯವಾಗಿಸಿದೆ ಎಂದರು.
ಸಮಸಮಾಜವನ್ನು ನಿರ್ಮಿಸುವುದೇ ಸಂವಿಧಾನದ ಆಶಯ
ಗ್ಯಾರಂಟಿಗಳೂ ಒಂದು ವಿಧದ ಅಭಿವೃದ್ಧಿಯಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರು ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗಲು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ವಾತಂತ್ರ್ಯ ಅತ್ಯಗತ್ಯ ಎಂದಿದ್ದರು. ವಿರೋಧಪಕ್ಷದವರು ಅಂಬೇಡ್ಕರ್ ರವರ ಈ ಚಿಂತನೆಯ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು ಎಂದರು.
ಕೇಂದ್ರದಿಂದ ರಾಜ್ಯದ ಜನರಿಗೆ ಅನ್ಯಾಯ
ಮೈಸೂರು ಮಹಾರಾಜರಾಗಿದ್ದ ನರಸಿಂಹರಾಜ ಒಡೆಯರ್ ಅವರ ಕಾಲದಲ್ಲಿ ಎಡಳ್ಳಿಯಾಗಿದ್ದ ಈ ಪ್ರದೇಶಕ್ಕೆ ನರಸಿಂಹರಾಜಪುರ ಎಂದು ನಾಮಕರಣವಾಯಿತು. ಈ ಭಾಗದ ಅಭಿವೃದ್ಧಿಯ ಉದ್ದೇಶದಿಂದ ಇಲ್ಲಿನ ಶಾಸಕರ ಒತ್ತಾಸೆಯಿಂದ ಇಂದು ಸೇತುವೆ ನಿರ್ಮಾಣ ಸಾಧ್ಯವಾಗಿದೆ. ಉಳಿದಂತೆ ರಸ್ತೆ ಅಗಲೀಕರಣ, ಬ್ಯಾರೇಜ್ ಕಂ ಬ್ರಿಡ್ಜ್ ನಿರ್ಮಾಣ, ಪ್ರವಾಸೋದ್ಯಮವೂ ಸೇರಿದಂತೆ ಹಲವು ಬೇಡಿಕೆಗಳ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರವು 2023-24 ರ ಆಯವ್ಯಯದಲ್ಲಿ 5300 ಕೋಟಿಗಳನ್ನು ಘೋಷಿಸಿತು. ಆದರೆ ಇದುವರೆಗೆ ಈ ಅನುದಾನ ನೀಡಿಲ್ಲ. ಈ ಮೂಲಕ ರಾಜ್ಯದ ಜನರಿಗೆ ಕೇಂದ್ರ ದ್ರೋಹವೆಸಗಿದೆ ಎಂದರು.
ಕಾಂಗ್ರೆಸ್ ಗ್ಯಾರಂಟಿಗಳನ್ನು ಬಿಜೆಪಿ ಅನುಕರಿಸುತ್ತಿದೆ
ಕಾಂಗ್ರೆಸ್ ಸರ್ಕಾರವೊಂದೇ ಕೊಟ್ಟ ಮಾತಿನಂತೆ ನಡೆಯುವ ಸರ್ಕಾರವಾಗಿದೆ ಎಂದರು. ನಮ್ಮ ಸರ್ಕಾರದಿಂದ ಗ್ಯಾರಂಟಿಗಳಿಗೆ ಇದುವರೆಗೆ 1.30 ಲಕ್ಷ ಕೋಟಿಗಳನ್ನು ವೆಚ್ಚ ಮಾಡಲಾಗಿದೆ. ರಾಜ್ಯದ ಗ್ಯಾರಂಟಿಗಳನ್ನು ಟೀಕಿಸುವ ಬಿಜೆಪಿಯವರು ಇತರೆ ರಾಜ್ಯಗಳಲ್ಲಿ ಅವುಗಳನ್ನೇ ಅನುಸರಿಸುತ್ತಿದ್ದಾರೆ. ಕೇಂದ್ರಕ್ಕಿಂತ ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದರು.



