ಕೇರಳದಿಂದ ರಾಜ್ಯಕ್ಕೆ ಬರುವವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಕೇರಳದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಲಸಿಕೆ ಪಡೆದಿರುವ ಪ್ರಮಾಣಪತ್ರವಿರಲಿ ಅಥವಾ ಆರ್ಟಿಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಏನೇ ಇರಲಿ ಕೇರಳದಿಂದ ಬರುವ ಪ್ರಯಾಣಿಕರಿಗೆ ಒಂದು ವಾರದ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯವಾಗಿರುತ್ತದೆ ಎಂದು ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಯೋಜಿಸಿದ್ದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೊಡಗು, ಹಾಸನ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಸಡಿಲಗೊಳಿಸಲಾಗಿದೆ ಎಂದು ತಿಳಿಸಿದರು. ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರುಗತಿಯಲ್ಲಿ ಸಾಗುತ್ತಿದ್ದು, ನಿಯಂತ್ರಣಕ್ಕೆ ಸಿಗುತ್ತಿಲ್ಲ. ಹೀಗಾಗಿ ಕೊರೊನಾ ಪರೀಕ್ಷಾ ಕಾರ್ಯತಂತ್ರವನ್ನು ರಾಜ್ಯ ಸರ್ಕಾರ ಬದಲಾಯಿಸಲಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾಜಾರ್ಜ್ ತಿಳಿಸಿದ್ದಾರೆ.
ದೇಶದಲ್ಲಿಯೇ ಅತಿ ಹೆಚ್ಚು ಕೊರೊನಾ ಪ್ರಕರಣಗಳು ಕೇರಳದಲ್ಲಿ ದಾಖಲಾಗಿವೆ. ದೇಶದ ಮುಕ್ಕಾಲು ಪ್ರಕರಣಗಳು ಕೇರಳವೊಂದರಿಂದಲೇ ಪತ್ತೆಯಾಗಿವೆ. ಅಗತ್ಯ ಕ್ರಮಗಳ ಹೊರತಾಗಿಯೂ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರದೇ ಇರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.
ರಾಜ್ಯದಲ್ಲಿ ಕೊರೊನಾ ಏರಿಕೆ ಹಿನ್ನೆಲೆಯಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಕೇಂದ್ರ ಸರ್ಕಾರ ಹೆಚ್ಚು ಪಾಸಿಟಿವಿಟಿ ದರ ಇರುವ ಕಡೆಗಳಲ್ಲಿ ನೈಟ್ ಕರ್ಫ್ಯೂ ವಿಧಿಸಲು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿತ್ತು. ಕೇರಳದಲ್ಲಿ ಕೊರೊನಾ ಏರಿಕೆ ಕುರಿತು ಈಚೆಗೆ ಮಾಹಿತಿ ನೀಡಿದ್ದ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್, ‘ರಾಜ್ಯದಲ್ಲಿ ಮನೆಯೊಳಗೇ ಕೊರೊನಾ ಸೋಂಕಿನ ಹರಡುವಿಕೆ ಹೆಚ್ಚಾಗುತ್ತಿದೆ’ ಎಂದಿದ್ದಾರೆ.