ಗಮನಿಸಿ: ಎಂಜಿನಿಯರಿಂಗ್ ಶುಲ್ಕ ಮತ್ತಷ್ಟು ಹೆಚ್ಚಳ!

0
29

“ಇದೇ ಸೆಪ್ಟೆಂಬರ್ 20ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (CET) ಫಲಿತಾಂಶ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಳೆದ ಅಗಸ್ಟ್ 28-29 ಮತ್ತು 30ರಂದು ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪ್ರಕ್ರಿಯೆಯನ್ನು ಯಾವುದೇ ಗೊಂದಲ-ಸಮಸ್ಯೆ ಇಲ್ಲದೆ ಪೂರ್ಣಗೊಳಿಸಲಾಗುವುದು ಎಂದರು.

“ಸಕಾಲಕ್ಕೆ ಫಲಿತಾಂಶ ನೀಡುವುದೂ ಸೇರಿ ನಿಗದಿತ ವೇಳಾಪಟ್ಟಿಯಂತೆ ಕೌನ್ಸಿಲಿಂಗ್ ಮುಗಿಸಲಾಗುವುದು. ಯಾವುದೇ ಕಾರಣಕ್ಕೂ ಶೈಕ್ಷಣಿಕ ವರ್ಷ ಹಳಿತಪ್ಪಲು ಬಿಡುವುದಿಲ್ಲ. ಜೊತೆಗೆ ಪದವಿ ಪ್ರವೇಶಕ್ಕೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ” ಎಂದು ಉನ್ನತ ಶಿಕ್ಷಣ ಸಚಿವರು ತಿಳಿಸಿದ್ದಾರೆ.

 

2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಆಗಸ್ಟ್ 28, 29 ಹಾಗೂ 30ರಂದು ರಾಜ್ಯಾದ್ಯಂತ ಪರೀಕ್ಷಾ ಕೇಂದ್ರಗಳಲ್ಲಿ ನಡೆದಿತ್ತು. ಕಳೆದ ವರ್ಷದಂತೆ ಈ ವರ್ಷವೂ ಕೋವಿಡ್ ಸವಾಲಿನ ನಡುವೆ ಸರ್ಕಾರದ ಮಾರ್ಗಸೂಚಿಯಂತೆ ನಡೆದಿತ್ತು. ಕೋವಿಡ್ ಕಾರಣದಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ಹೀಗಾಗಿ ಸಿಇಟಿಯಲ್ಲಿ ಪಡೆಯುವ ಅಂಕಗಳ ಆಧಾರದ ಮೇಲೆಯೇ ರ್ಯಾಂಕ್ ನಿರ್ಧಾರ ಮಾಡಲಾಗುತ್ತಿರುವುದು ಇದೇ ಮೊದಲ ಸಲವಾಗಿದೆ.

 

ಎಂಜಿನಿಯರಿಂಗ್ ಕಾಲೇಜು ಶುಲ್ಕ ಹೆಚ್ಚಳ ವಿಚಾರದ ಬಗ್ಗೆ ಮುಂದಿನ ವಾರ ಸಭೆ ನಡೆಸಲು ತೀರ್ಮಾನ ಮಾಡಲಾಗಿದೆ. ಸಭೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಲ್ಲಿಟ್ಟುಕೊಂಡು ಎಲ್ಲ ಅಂಶಗಳ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲು ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ. ಅಶ್ವಥ್ ನಾರಾಯಣ ತೀರ್ಮಾನ ಮಾಡಿದ್ದಾರೆ.


ಶುಲ್ಕ ಹೆಚ್ಚಳಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಉನ್ನತ ಶಿಕ್ಷಣ ಇಲಾಖೆಗೆಬ ಮನವಿ ಮಾಡಿದೆ. ಶುಲ್ಕ ಹೆಚ್ಚಳ ಮಾಡಿದರೂ ವಿದ್ಯಾರ್ಥಿಗಳ ಹಿತ ಕಾಯಲಾಗುವುದು ಎಂದು ಅಶ್ವಥ್ ನಾರಾಯಣ ಭರವಸೆ ನೀಡಿದ್ದಾರೆ. ಜೊತೆಗೆ ಕ್ರಮದ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.

LEAVE A REPLY

Please enter your comment!
Please enter your name here