ದೇಶದಲ್ಲಿ ಮುಂಗಾರು ಪುನರಾರಂಭವಾಗಿ ವಾರ ಕಳೆದಿದ್ದು, ಹಲವು ರಾಜ್ಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಪ್ರವಾಹ, ಭೂಕುಸಿತದಂಥ ಘಟನೆಗಳೂ ಹಲವೆಡೆ ಸಂಭವಿಸಿವೆ. ಇಡೀ ದೇಶವನ್ನು ಮುಂಗಾರು ಆವರಿಸಿದ್ದು, ಮುಂದಿನ ಆರರಿಂದ ಏಳು ದಿನಗಳ ಕಾಲ ದೇಶದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈಋತ್ಯ ಮುಂಗಾರು ಪ್ರಭಾವದಿಂದಾಗಿ ಹಿಮಾಚಲ ಪ್ರದೇಶದಲ್ಲಿ ಮುಂದಿನ ಆರು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ರವಾನಿಸಿದೆ. ಗುಡುಗು ಮಿಂಚು ಸಹಿತ ಮಳೆಯಾಗುವ ಸೂಚನೆ ನೀಡಿದೆ. ಇನ್ನೂ ಯಾವ್ಯಾವ ರಾಜ್ಯಗಳಿಗೆ ಎಚ್ಚರಿಕೆ ನೀಡಲಾಗಿದೆ? ಮುಂದೆ ಓದಿ…
ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಏರ್ಪಟ್ಟಿದ್ದು, ಪ್ರವಾಹದಲ್ಲಿ ಒಂಬತ್ತು ಮಂದಿ ಮೃತಪಟ್ಟಿರುವುದು ವರದಿಯಾಗಿದೆ. ಹಿಮಾಚಲದ ಹೊರತಾಗಿ ಇನ್ನಿತರ ರಾಜ್ಯಗಳಿಗೂ ಮಳೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಪ್ರದೇಶ, ಹರಿಯಾಣ, ಉತ್ತರಾಖಂಡ, ರಾಜಸ್ಥಾನ, ದೆಹಲಿಯಲ್ಲಿ ಅತಿ ಹೆಚ್ಚಿನ ಮಳೆಯಾಗುವುದಾಗಿ ತಿಳಿಸಿದೆ. ಮಳೆಯಿಂದ ಹೆಚ್ಚಿನ ಹಾನಿ ಸಂಭವಿಸಬಹುದು ಎಂದು ಎಚ್ಚರಿಕೆ ನೀಡಿದೆ.
ಗೋವಾ, ಕೊಂಕಣ, ಮಧ್ಯ ಮಹಾರಾಷ್ಟ್ರ, ಪುದುಚೆರಿಯ ಮಾಹೆ, ಕೇರಳ ಹಾಗೂ ಕರ್ನಾಟಕದಲ್ಲಿ ಮುಂದಿನ ವಾರವಿಡೀ ಅಧಿಕ ಮಳೆ ದಾಖಲಾಗುವುದಾಗಿ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಜುಲೈ 21ರವರೆಗೂ ಭಾರಿ ಮಳೆಯಾಗಲಿದೆ ಎಂದು ತಿಳಿಸಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಪ್ರದೇಶಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.