ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ
ಬೆಂಗಳೂರು: ಆ ಹುಡುಗ ಇನ್ನು ಎಳಸು. ಆತನಿಗೆ ಇನ್ನು ಅನುಭವವಿಲ್ಲ.ಅವನೊಬ್ಬ ವೇಸ್ಟ್ ಮೆಟೀರಿಯಲ್. ಗೌರವ ಕೊಟ್ಟು ಕರೆದು ಮಾತಾಡಿದರೆ ಬಾಯಿಗೆ ಬಂದಂತೆ ವದರುತ್ತಿದ್ದಾನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು? ಈ ದೇಶದಲ್ಲಿ, ಪ್ರಪಂಚದಲ್ಲಿಯೇ ಟನಲ್ ರಸ್ತೆಗಳೇ ಬೇಡ ಎಂದು ಅವನು ಕೇಂದ್ರ ಸಚಿವನಾದ ಮೇಲೆ ಲೋಕಸಭೆಯಲ್ಲಿ ತೀರ್ಮಾನ ಮಾಡಲಿ” ಎಂದು ಕಿಡಿ ಕಾರಿದ್ದಾರೆ.
ನಗರದ ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಟನಲ್ ರಸ್ತೆ ಯೋಜನೆಯನ್ನು ತಂತ್ರಜ್ಞರ ಅಭಿಪ್ರಾಯ ಪಡೆದು ಮಾಡಬೇಕಿತ್ತು ಎನ್ನುವ ಹೇಳಿಕೆಯ ಬಗ್ಗೆ ಕೇಳಿದಾಗ ಉತ್ತರಿಸಿದ ಡಿಸಿಎಂ ಅವರು, “ಏನೋ ಹೋಗಲಿ ಅಂತ ಗೌರವ ಕೊಟ್ಟು ನನ್ನ ಜೊತೆ ಮಾತನಾಡಲು ಅವಕಾಶ ನೀಡಿದರೆ ಏನೇನೋ ಮಾತನಾಡುತ್ತಿದ್ದಾನೆ. ಆದರೆ ನಾನು ಆತನ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಸಂಸದ ತೇಜಸ್ವಿ ಸೂರ್ಯನಿಗೆ ಪ್ರಪಂಚ ಹೇಗಿದೆ ಎಂದೇ ಗೊತ್ತಿಲ್ಲ” ಎಂದರು.
ನಾನು ಹುಡುಗನ ಬಳಿ ಕಾರಿಲ್ಲದಿದ್ದರೆ ಹೆಣ್ಣು ನೀಡುವುದಿಲ್ಲ ಎಂದಿದ್ದೆ. ಅದನ್ನೇ ಹಿಡಿದುಕೊಂಡು ಮಾತಾಡುತ್ತಿದ್ದಾನೆ. ಈತ ಏಕೆ ಕಾರಲ್ಲಿ ಓಡಾಡುತ್ತಿದ್ದಾನೆ? ಆತ, ಆತನ ಕುಟುಂಬ ಸದಸ್ಯರು ಮೆಟ್ರೋ, ಸರ್ಕಾರಿ ಬಸ್ ಬಳಸಲಿ. ಅವರ ಪಕ್ಷದ ಶಾಸಕರು ಮೆಟ್ರೋ, ಆಟೋರಿಕ್ಷಾ, ಸಾರ್ವಜನಿಕ ಸಾರಿಗೆಗಳಲ್ಲಿ ಓಡಾಡಲಿ. ಬೇಡ ಎಂದವರಾರು? ಇವರಿಗೆ ಕಾರುಗಳು ಏಕೆ ಬೇಕು? ಬೆಂಗಳೂರಿನಲ್ಲಿ 1.30 ಕೋಟಿಗೂ ಹೆಚ್ಚು ವಾಹನಗಳಿವೆ ಎಂಬುದನ್ನು ಆತ ಅರ್ಥ ಮಾಡಿಕೊಳ್ಳಬೇಕು, ಅವರಿಗೆಲ್ಲ ವಾಹನ ಬಳಸಬೇಡಿ ಎಂದು ಹೇಳಲು ಆಗುತ್ತದೆಯೇ” ಎಂದು ತಿವಿದರು.
ಮದುವೆ ಮಾಡಿಸಲು ಈ ಯೋಜನೆ ಕೈಗೆತ್ತಿಕೊಂಡಿದ್ದಾರೆ ಎನ್ನುವ ಟೀಕೆಯ ಬಗ್ಗೆ ಕೇಳಿದಾಗ, “ಅದಕ್ಕೆ ನಾನು ಆತನನ್ನು ಎಳಸು ಎಂದು ಕರೆದಿದ್ದು. ನೀವೆಲ್ಲರೂ ಕ್ಯಾಮೆರಾ ಹಿಡಿದುಕೊಂಡು (ಮಾಧ್ಯಮದವರು) ಸಾರ್ವಜನಿಕ ಸಾರಿಗೆಯಲ್ಲಿ ಓಡಾಡಿಕೊಂಡು ಕೆಲಸ ಮಾಡಲು ಆಗುತ್ತದೆಯೇ? ಶಾಲಾ ಮಕ್ಕಳನ್ನು ಶಾಲಾ ವಾಹನದಲ್ಲಿ ಕಳುಹಿಸುತ್ತಾರೆ. ಅವರಿಗೆ ಸಾರ್ವಜನಿಕ ಸಾರಿಗೆಯಲ್ಲಿ ಕಳುಹಿಸಿ ಎಂದು ಹೇಳಲು ಆಗುತ್ತದೆಯೇ?” ಎಂದರು.






