ಡಿಕೆಶಿ ನೀರಿನ ಹೆಜ್ಜೆ ಇನ್ನಾವುದೋ ಪುಸ್ತಕದ ಕಟ್ ಅಂಡ್ ಪೇಸ್ಟ್: ಹೆಚ್.ಡಿ. ಕುಮಾರಸ್ವಾಮಿ ಕಿಡಿ
ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವರು; ನಾನು ಕೊಟ್ಟಿದ್ದನ್ನು ಪಟ್ಟಿ ಮಾಡಿ ಹೇಳುತ್ತೇನೆ, ಮೊದಲು ಐದು ವರ್ಷ ಮುಖ್ಯಮಂತ್ರಿ ಆಗಿದ್ದಾಗ, ಈಗ ಏನೇನು ಕೊಟ್ಟಿದ್ದೀರಿ ಎಂಬುದನ್ನು ಹೇಳಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದರು.
ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು; ನಾನು ಕೊಟ್ಟಿದ್ದನ್ನು ಹೇಳುತ್ತೇನೆ. ಸಿದ್ದರಾಮಯ್ಯ ಅವರೇ.. ನೀವು ರೈತರಿಗೆ ಏನು ಕೊಡುಗೆ ಕೊಟ್ಟಿದ್ದೀರಿ ಎಂಬುದನ್ನು ಹೇಳಿ. ಮಂಡ್ಯಕ್ಕೆ ನಿಮ್ಮ ಕೊಡುಗೆ ಏನು? ಹಿಂದಿನ ಐದು ವರ್ಷ ಆಡಳಿತದಲ್ಲಿ 200ಕ್ಕೂ ಹೆಚ್ಚು ರೈತರು ಮಂಡ್ಯದಲ್ಲಿ ಸರಣಿ ಆತ್ಮಹತ್ಯೆ ಮಾಡಿಕೊಂಡಿದ್ದೇ ನಿಮ್ಮ ಕೊಡುಗೆ. ಅಂಥ ಕಷ್ಟಕಾಲದಲ್ಲಿ ನಾನು ಅಧಿಕಾರಕ್ಕೆ ಬಂದ ಮೇಲೆ ಅದೇ ಜಿಲ್ಲೆಯ ರೈತರ 900 ಕೋಟಿ ಸಾಲ ಮನ್ನಾ ಮಾಡಿದೆ. ಇದಕ್ಕಿಂತ ಕೊಡುಗೆ ಬೇಕಾ? ನಿಮ್ಮ ಕಾಲದಲ್ಲಿ ರೈತರ ಜೀವ ಹೋಯಿತು, ನನ್ನ ಕಾಲದಲ್ಲಿ ಜೀವ ಉಳಿಯಿತು. ಇದು ನಿಮಗೆ ಗೊತ್ತಿರಲಿ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ರೈತರ ಪರಿಸ್ಥಿತಿ ಎಲ್ಲಿಗೆ ಬಂದಿದೆ ಎಂಬುದನ್ನು ನೋಡಿ. ಪ್ರವಾಹ, ಮಳೆಯಲ್ಲಿ ಜನ ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದರೆ ನೀವು ಮೋಜು ಮಸ್ತಿ ಮಾಡುತ್ತಿದ್ದೀರಿ. ಕಲ್ಯಾಣ ಕರ್ನಾಟಕದಲ್ಲಿ ತೊಗರಿ ಬೆಳೆಗಾರರ ಪರಿಸ್ಥಿತಿ ಏನಾಗಿದೆ? ತೊಗರಿ ದರ ಕುಸಿದಿದೆ. ಅದಕ್ಕೆ ಏನು ಮಾಡಿದ್ದೀರಿ? ಈವರೆಗೆ ತೊಗರಿ ಖರೀದಿ ಕೇಂದ್ರಗಳನ್ನು ತೆರೆದಿಲ್ಲ. ಸರಿಯಾದ ಸಮಯದಲ್ಲಿ ರಾಜ್ಯ ಸರಕಾರ ಮಧ್ಯಪ್ರವೇಶ ಮಾಡಿ ರೈತರ ನೆರವಿಗೆ ಬರಬೇಕಿತ್ತು, ಬಂದಿಲ್ಲ ಯಾಕೆ? ಕೇಂದ್ರ ಸರಕಾರ ರಾಜ್ಯಕ್ಕೆ ಪರಿಶೀಲನಾ ತಂಡ ಕಳುಹಿಸಿ ಎನ್ನುತ್ತಾರೆ. ನಾಲ್ಕು ತಿಂಗಳ ಬಳಿಕ ಇವರಿಗೆ ಜ್ಞಾನೋದಯ ಆಗಿದೆ. ಈಗ ಕೇಂದ್ರ ತಂಡ ರಾಜ್ಯಕ್ಕೆ ಬಂದರೆ ಏನು ವರದಿ ಕೊಡುತ್ತಾರೆ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ʼನೀರಿನ ಹೆಜ್ಜೆʼ ಪುಸ್ತಕದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು; ಯಾರೋ ಬರೆದಿರುವ ಆ ಪುಸ್ತಕ ಕೇವಲ ಕಟ್ ಅಂಡ್ ಪೇಸ್ಟ್ ಅಷ್ಟೇ. ಬೇರೆ ಯಾವುದೋ ಪುಸ್ತಕದಲ್ಲಿ ಬರೆದಿರುವುದನ್ನೇ ಕತ್ತರಿಸಿ ಈ ಪುಸ್ತಕದಲ್ಲಿ ಅಂಟಿಸಿದ್ದಾರೆ! ನನಗೆ ಈ ಪುಸ್ತಕವನ್ನು ಯಾರೋ ತಂದುಕೊಟ್ಟರು. ಸಾಮಾನ್ಯವಾಗಿ ಯಾವುದೇ ಪುಸ್ತಕವಾದರೂ ಅದನ್ನು ಆಸಕ್ತಿಯಿಂದ ಓದುತ್ತೇನೆ. ಆದರೆ, ಈ ಪುಸ್ತಕ ನೋಡಿದಾಗ ಇಲ್ಲಿರುವುದು ಅವರ ಹೆಜ್ಜೆಗಳಲ್ಲ, ಯಾರದೋ ಹೆಜ್ಜೆಗಳನ್ನು ನನ್ನ ಹೆಜ್ಜೆಗಳು ಎಂದು ತೋರಿಸುವ ಕಸರತ್ತು ಮಾಡಿದ್ದಾರೆ ಎಂದು ಹೇಳಿದರು.






