ತಂತ್ರಜ್ಞಾನಕ್ಕೆ ಗುಲಾಮರಾಗಬೇಡಿ, ಸಾಮರ್ಥ್ಯ ಹೆಚ್ಚಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಕಿವಿಮಾತು
ನವದೆಹಲಿ: ವಿದ್ಯಾರ್ಥಿಗಳು ತಂತ್ರಜ್ಞಾನಕ್ಕೆ ಗುಲಾಮರಾಗದೆ, ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಅದನ್ನು ಬಳಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.
ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದ ಎರಡನೇ ಸಂಚಿಕೆಯಲ್ಲಿ ಪ್ರಧಾನಿ ಮೋದಿ ಇಂದು ಕೊಯಮತ್ತೂರು, ರಾಯ್ಪುರ, ಗುವಾಹಟಿ ಹಾಗೂ ಗುಜರಾತ್ನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ಪರೀಕ್ಷೆ, ತಂತ್ರಜ್ಞಾನ ಬಳಕೆ ಹಾಗೂ ಜೀವನಶೈಲಿ ಕುರಿತು ಮಹತ್ವದ ಸಂದೇಶ ನೀಡಿದರು.
ಮೊಬೈಲ್ ಫೋನ್ಗಳು ಮತ್ತು ಟಿವಿಗಳಿಲ್ಲದೆ ಕೆಲ ಮಕ್ಕಳಿಗೆ ಊಟ ಮಾಡಲೂ ಸಾಧ್ಯವಾಗುತ್ತಿಲ್ಲ. ಇದು ಮಕ್ಕಳು ತಂತ್ರಜ್ಞಾನಕ್ಕೆ ಗುಲಾಮರಾಗುತ್ತಿರುವುದನ್ನು ತೋರಿಸುತ್ತದೆ ಎಂದು ಪ್ರಧಾನಿ ಹೇಳಿದರು. ತಂತ್ರಜ್ಞಾನ ನಿಮ್ಮನ್ನು ಆಳಲು ಬಿಡದೆ, ಅದನ್ನು ನಿಮ್ಮ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ಕೃತಕ ಬುದ್ಧಿಮತ್ತೆ ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳ ಬಗ್ಗೆ ಭಯಪಡಬೇಡಿ. ಅವುಗಳನ್ನು ಬಳಸಿಕೊಂಡು ನಿಮ್ಮ ಕೌಶಲ್ಯ ಮತ್ತು ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಿ ಎಂದು ಮೋದಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಪಡೆಯಲು ಹಿಂದಿನ ವರ್ಷಗಳ ಪ್ರಶ್ನೆ ಪತ್ರಿಕೆಗಳನ್ನು ಅಭ್ಯಾಸ ಮಾಡಬೇಕು. ಪರೀಕ್ಷೆಗೆ ಸರಿಯಾದ ತಯಾರಿ ಮಾಡಿಕೊಂಡಿದ್ದರೆ ಭಯ ಮತ್ತು ಚಿಂತೆ ಇರುವುದಿಲ್ಲ ಎಂದರು. ಜೊತೆಗೆ ನಿದ್ದೆಗೆಟ್ಟು ಓದುವುದಕ್ಕಿಂತ ಉತ್ತಮ ನಿದ್ರೆ ಮಾಡುವುದು ಬಹಳ ಮುಖ್ಯ ಎಂದು ಹೇಳಿದರು.






