ತಹಶೀಲ್ದಾರ್ ವಿರುದ್ಧ ಪರಮೇಶ್ವರ್ʼಗೆ ಸಾಲುಮರದ ತಿಮ್ಮಕ್ಕ ದೂರು
ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಹಶೀಲ್ದಾರ್ ವಿರುದ್ಧ ಪರಿಸರ ಹೋರಾಟಗಾರ್ತಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಲುಮರದ ತಿಮ್ಮಕ್ಕ ದೂರು ನೀಡಿದ್ದಾರೆ. ತಾನು ನೆಟ್ಟಿದ್ದ ಇನ್ನೂರಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ತೆರವುಗೊಳಿಸಲಾಗಿದೆ ಎಂದು ಆರೋಪಿಸಿ, ತಿಮ್ಮಕ್ಕ ಅವರು ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ದೂರು ಸಲ್ಲಿಸಿದ್ದಾರೆ. ಬೇಲೂರು ತಾಲೂಕು ಕಚೇರಿ ಹಿಂಭಾಗದಲ್ಲಿ ನೆಟ್ಟಿದ್ದ ಮರಗಳನ್ನು ಕಡಿದು ಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಬೇಲೂರು ತಾಲೂಕು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ವಿರುದ್ಧ ಆರೋಪ ಕೇಳಿಬಂದಿದೆ. ಪರಿಸರ ಪ್ರೇಮದ ಸಂಕೇತವಾಗಿ ಜನಪ್ರಿಯರಾದ ತಿಮ್ಮಕ್ಕ, ರಸ್ತೆ ಬದಿಯಲ್ಲಿ ನೂರಾರು ಮರಗಳನ್ನು ನೆಟ್ಟು ಬೆಳೆಸಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಮಕ್ಕಳಿಲ್ಲವೆಂಬ ಕಾರಣಕ್ಕೆ ತಿಮ್ಮಕ್ಕ ಅವರು ನೆಟ್ಟ ಮರಗಳನ್ನೇ ತಮ್ಮ ಮಕ್ಕಳಂತೆ ಪೋಷಿಸುತ್ತಾ, ಪರಿಸರ ಉಳಿಸುವ ಸಂದೇಶವನ್ನು ಸಮಾಜಕ್ಕೆ ನೀಡಿದ್ದಾರೆ.