ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು: ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ಸ್ವತಃ ಮನೆ ಬಾಗಿಲಿಗೆ ಬರುತ್ತದೆ. ಅದಕ್ಕೆ ನಾನೇ ಉತ್ತಮ ಉದಾಹರಣೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಆಯೋಜಿಸಿದ್ದ ಮಹಿಳಾ ಸಬಲೀಕರಣ ಹಾಗೂ ಸರ್ವತೋಮುಖ ಅಭಿವೃದ್ಧಿ ಕಾರ್ಯಗಾರದಲ್ಲಿ ಮಾತನಾಡಿದ ಅವರು, ಮಹಿಳೆಯರು ಸ್ಪಷ್ಟ ಗುರಿ ಇಟ್ಟುಕೊಂಡು ರಾಜಕಾರಣಕ್ಕೆ ಬರಬೇಕು ಎಂದು ಕರೆ ನೀಡಿದರು.
ಬೂತ್ ಮಟ್ಟದಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆಯಾಗಿ ಕೆಲಸ ಮಾಡುವುದು ಅತ್ಯಂತ ಮುಖ್ಯ ಎಂದು ಹೇಳಿದರು. ಬಿಜೆಪಿಯಲ್ಲಿ ಆರ್ಎಸ್ಎಸ್ ಯಾವುದೇ ಫಲಾಪೇಕ್ಷೆ ಇಲ್ಲದೆ ಕೆಲಸ ಮಾಡುವಂತೆ, ಮಹಿಳಾ ಕಾಂಗ್ರೆಸ್ ಘಟಕವೂ ಪಕ್ಷದ ಬಲವರ್ಧನೆಗಾಗಿ ನಿಸ್ವಾರ್ಥವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಮುಂದಿನ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಎಲ್ಲಾ ವರ್ಗಗಳ ಸಮರ್ಥ ಕಾರ್ಯಕರ್ತರನ್ನು ಗುರುತಿಸಿ ಟಿಕೆಟ್ ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಸಂಘಟನೆಯಲ್ಲಿ ದುಡಿಯುವವರನ್ನು ಹಾಗೂ ಕಾಂಗ್ರೆಸ್ ಪಕ್ಷದ ತತ್ವಸಿದ್ಧಾಂತಗಳಿಗೆ ಬದ್ದರಾಗಿರುವವರನ್ನು ಗುರುತಿಸುವುದು ಅಗತ್ಯ ಎಂದು ಹೇಳಿದ ಅವರು, ಜನರ ವಿಶ್ವಾಸ ಗೆದ್ದು ಅವರನ್ನು ಕಾಂಗ್ರೆಸ್ ಪಕ್ಷದತ್ತ ಆಕರ್ಷಿಸುವಂತೆ ಮಹಿಳಾ ಕಾರ್ಯಕರ್ತರಿಗೆ ಸಲಹೆ ನೀಡಿದರು.






