ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ
ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಒಣ ಹವೆಯ ವಾತಾವರಣ ಮುಂದುವರಿದಿದ್ದು, ಬೆಂಗಳೂರಿನಲ್ಲಿ ತೀವ್ರ ಚಳಿಯೊಂದಿಗೆ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು, ವಿಶೇಷವಾಗಿ ಮಕ್ಕಳು ಹಾಗೂ ವೃದ್ಧರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮತ್ತು ವೈದ್ಯರು ಸಲಹೆ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ ಬೆಳಗಿನ ಜಾವ ಶೀತ ಹಾಗೂ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ಸೂಚಿಸಲಾಗಿದೆ. ಇಂದಿನ ದಿನ ನಗರದಲ್ಲಿ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ. ಉತ್ತರ ಒಳನಾಡು ಪ್ರದೇಶದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದ ಒಣಹವೆ ಮುಂದುವರಿದಿದ್ದು, ಇಂದೂ ಸಹ ಅದೇ ಪರಿಸ್ಥಿತಿ ಇರಲಿದೆ ಎಂದು ತಿಳಿಸಲಾಗಿದೆ.
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಮುಂದುವರಿಯಲಿದೆ.
ತೀವ್ರ ಚಳಿ ಮತ್ತು ಒಣಹವೆಯಿಂದ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ, ಬೆಚ್ಚಗಿನ ಹೊದಿಕೆ ಬಳಸುವುದು, ಬಿಸಿ ಆಹಾರ ಸೇವನೆ ಮಾಡುವುದು ಹಾಗೂ ಸಮತೋಲನ ಆಹಾರಕ್ಕೆ ಆದ್ಯತೆ ನೀಡುವಂತೆ ವೈದ್ಯರು ಸಲಹೆ ನೀಡಿದ್ದಾರೆ.






