No menu items!
23.4 C
Munich
Saturday, June 13, 2026

ಬೆಂಗಳೂರು–ಕರಾವಳಿ–ಗೋವಾ ನಡುವೆ ವಂದೇ ಭಾರತ್‌ ರೈಲು ಸೇವೆಗೆ ಹೆಚ್‌.ಡಿ. ಕುಮಾರಸ್ವಾಮಿ ಮನವಿ

Must read

ಬೆಂಗಳೂರು–ಕರಾವಳಿ–ಗೋವಾ ನಡುವೆ ವಂದೇ ಭಾರತ್‌ ರೈಲು ಸೇವೆಗೆ ಹೆಚ್‌.ಡಿ. ಕುಮಾರಸ್ವಾಮಿ ಮನವಿ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಇನ್ನಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆ ಆರಂಭಿಸುವಂತೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ ಅವರು, ಬೆಂಗಳೂರು ನಗರದಿಂದ ಹಾಸನ – ಮಂಗಳೂರು ಜಂಕ್ಷನ್‌ – ಉಡುಪಿ – ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ವರೆಗೆ ಅತಿವೇಗದ ವಂದೇ ಭಾರತ್‌ ರೈಲು ಸೇವೆ ಆರಂಭಿಸುವಂತೆ ಕೋರಿದ್ದಾರೆ.

ಈ ಮಾರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ವಂದೇ ಭಾರತ್‌ ರೈಲು ಸಂಚಾರ ಆರಂಭವಾದಲ್ಲಿ ಕರಾವಳಿ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಪ್ರದೇಶದ ಅಭಿವೃದ್ಧಿಗೂ ಪೂರಕವಾಗಲಿದೆ ಎಂದು ಅವರು ರೈಲ್ವೆ ಸಚಿವರ ಗಮನ ಸೆಳೆದಿದ್ದಾರೆ.

ಪಶ್ಚಿಮಘಟ್ಟ ಪ್ರದೇಶ ಸೇರಿದಂತೆ ಈ ಮಾರ್ಗದಲ್ಲಿ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದರಿಂದ, ವೇಗದ ರೈಲು ಸೇವೆ ಆರಂಭಿಸಲು ಅಗತ್ಯವಿರುವ ಎಲ್ಲಾ ಮೂಲಸೌಕರ್ಯಗಳು ಈಗಾಗಲೇ ಲಭ್ಯವಿವೆ ಎಂದು ಕುಮಾರಸ್ವಾಮಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹಾಸನ, ಮಂಗಳೂರು ಜಂಕ್ಷನ್‌, ಉಡುಪಿ ಹಾಗೂ ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್‌ ರೈಲು ಸೇವೆಯಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗಲಿದೆ. ಜೊತೆಗೆ ಕರಾವಳಿ ಭಾಗದಲ್ಲಿರುವ ಪುಣ್ಯಕ್ಷೇತ್ರಗಳಿಗೆ ಯಾತ್ರಾರ್ಥಿಗಳು ಸುಲಭವಾಗಿ ತೆರಳಿ ಮರಳಲು ಸಾಧ್ಯವಾಗಲಿದೆ. ಶಿಕ್ಷಣ ಮತ್ತು ವೃತ್ತಿಪರ ಕಾರಣಗಳಿಗಾಗಿ ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಇದು ಬಹುಪಯೋಗಿಯಾಗಲಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಭಾರತದ ಐಟಿ ರಾಜಧಾನಿಯಾಗಿರುವ ಬೆಂಗಳೂರು ಹಾಗೂ ಬಂದರು ನಗರ ಮಂಗಳೂರು ಸೇರಿದಂತೆ ಕರಾವಳಿ ಕರ್ನಾಟಕದ ಪ್ರಮುಖ ವಾಣಿಜ್ಯ ಕೇಂದ್ರಗಳು, ಬಂದರುಗಳು, ಪ್ರವಾಸಿ ತಾಣಗಳು ಮತ್ತು ಗೋವಾ ನಡುವೆ ನೇರ ಹಾಗೂ ವೇಗದ ರೈಲು ಸಂಪರ್ಕ ಕಲ್ಪಿಸುವುದರಿಂದ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ಚುರುಕಾಗಲಿವೆ ಎಂದು ಹೆಚ್‌.ಡಿ. ಕುಮಾರಸ್ವಾಮಿ ಅವರು ಪ್ರತಿಪಾದಿಸಿದ್ದಾರೆ.

- Advertisement -spot_img

More articles

- Advertisement -spot_img

Latest article