ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ.
ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆಗೆ ಮರಗಳು ಧರೆಗುರುಳಿದ್ದರೆ, ಇನ್ನೂ ಹಲವೆಡೆ ರಸ್ತೆಗಳು, ಸೇತುವೆಗಳು ಬಿರುಕು ಬಿಟ್ಟಿವೆ. ಮಹಾರಾಷ್ಟ್ರ ಗಡಿಗೆ ಹತ್ತಿರವಿರುವ ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ನದಿಗಳ ನೀರಿನ ಮಟ್ಟ ಹೆಚ್ಚಾಗಿದೆ. ಕಳೆದ ನಾಲ್ಕು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಹೀಗಾಗಿ ಚಿಕ್ಕೋಡಿಯಲ್ಲಿ ನಾಲ್ಕು ಸೇತುವೆಗಳು ಜಲಾವೃತವಾಗಿವೆ.
ಜೂನ್ 21ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮಳೆಯ ಪ್ರಮಾಣ ಹೆಚ್ಚಾಗಿದ್ದರಿಂದ ಕೃಷ್ಣಾ, ವೇದಗಂಗಾ, ದೂದ್ಗಂಗಾ ಮತ್ತು ಹಿರಣ್ಯಕೇಶಿ ನದಿಗಳು ನೀರಿನ ಮಟ್ಟ ಏಕಾಏಕಿ ಹೆಚ್ಚಾಗಿದೆ. ಕರದಂಗಾ-ಬೋಜ್ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಜತ್ರತ್-ಭಿವಶಿ ಸೇತುವೆ, ಸಂಕೇಶ್ವರ್-ನಾಗ್ನೂರ್ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ನಿಪ್ಪಾಣಿ ತಾಲೂಕಿನಲ್ಲಿ ವೇದಗಂಗಾ ನದಿಗೆ ಕಟ್ಟಲಾಗಿರುವ ಅಕೋಲ್-ಸಿದ್ನಲ್ ಸೇತುವೆಗಳು ಭಾರೀ ಮಳೆಗೆ ಸಂಪೂರ್ಣ ಮುಳುಗಿವೆ. ಹೀಗಾಗಿ ಸಂಪರ್ಕ ವ್ಯವಸ್ಥೆ ಕಡಿತಗೊಂಡಿದ್ದು, ಜನರು ಪರದಾಡುವಂತಾಗಿದೆ.