ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲನೇ ಪಂದ್ಯ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ಇತ್ತೀಚಿಗಷ್ಟೇ ಮುಗಿದಿದೆ. ಮಳೆಯ ಕಾಟದಿಂದ ಡ್ರಾನಲ್ಲಿ ಅಂತ್ಯವಾದ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು.
ಮೊದಲ ಇನ್ನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಬೌಲರ್ಗಳ ದಾಳಿಗೆ ಇಂಗ್ಲೆಂಡ್ ಬ್ಯಾಟ್ಸ್ಮನ್ಗಳು ತತ್ತರಿಸಿದ ಸಂದರ್ಭದಲ್ಲಿ ಇಂಗ್ಲೆಂಡ್ ತಂಡಕ್ಕೆ ಆಸರೆಯಾದ ಜೋ ರೂಟ್ 64 ರನ್ ಗಳಿಸಿ ಜವಾಬ್ದಾರಿಯುತ ಆಟವನ್ನಾಡಿದರು. ಎರಡನೇ ಇನ್ನಿಂಗ್ಸ್ನಲ್ಲಿ ಅಬ್ಬರದ ಶತಕ (109) ಬಾರಿಸಿದ ಜೋ ರೂಟ್ ಇಂಗ್ಲೆಂಡ್ ಮುನ್ನೂರರ ಗಡಿ ದಾಟುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು. ಹೀಗಾಗಿಯೇ ಮೊದಲ ಪಂದ್ಯದಲ್ಲಿ ಜೋ ರೂಟ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು.
ಪಂದ್ಯ ಮುಗಿದ ನಂತರ ಮಾತನಾಡಿರುವ ಭಾರತದ ಮಾಜಿ ಕ್ರಿಕೆಟಿಗ ಜಹೀರ್ ಖಾನ್ ಮೊದಲನೇ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಜೋ ರೂಟ್ ಬದಲಾಗಿ ಭಾರತದ ಪರ ಅತ್ಯುತ್ತಮ ಪ್ರದರ್ಶನ ತೋರಿದ ಜಸ್ಪ್ರೀತ್ ಬುಮ್ರಾಗೆ ಸಿಗಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಎರಡು ಇನ್ನಿಂಗ್ಸ್ ಪೈಕಿ 9 ವಿಕೆಟ್ಗಳನ್ನು ಪಡೆದ ಜಸ್ ಪ್ರೀತ್ ಬುಮ್ರಾ ಇಂಗ್ಲೆಂಡ್ ತಂಡದ ಪ್ರಮುಖ ಬ್ಯಾಟ್ಸ್ಮನ್ಗಳನ್ನು ಪೆವಿಲಿಯನ್ ಕಡೆ ಕಳುಹಿಸುವ ಮೂಲಕ ಭಾರತ ತಂಡದ ಮುನ್ನಡೆಯಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದರು. ಹೀಗಾಗಿ ಮೊದಲನೇ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಜೋ ರೂಟ್ ಬದಲು ಭಾರತದ ಜಸ್ ಪ್ರೀತ್ ಬುಮ್ರಾಗೆ ನೀಡಬೇಕಿತ್ತು ಎಂದು ಜಹೀರ್ ಖಾನ್ ಅಭಿಪ್ರಾಯಪಟ್ಟಿದ್ದಾರೆ