ಲೋಕಸಭೆಯಿಂದ ಮತ್ತೆ 31 ಸಂಸದರು ಅಮಾನತು

1 Min Read

ನವದೆಹಲಿ: ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ಸೇರಿದಂತೆ ವಿಪಕ್ಷಗಳ 31 ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. ಕಳೆದ ವಾರ ಆಗಿದ್ದ ಲೋಕಸಭಾ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ವಿಪಕ್ಷಗಳು ಪ್ರತಿಭಟಿಸಿದ್ದವು. ಕಲಾಪಕ್ಕೆ ಅಡ್ಡಿಪಡಿಸಿದ್ದರಿಂದ ಪ್ರತಿಪಕ್ಷಗಳ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಅಮಾನತುಗೊಳಿಸಲಾಯಿತು.

ಗೃಹ ಸಚಿವರ ಹೇಳಿಕೆಗೆ ಒತ್ತಾಯಿಸಿ ಕಳೆದ ವಾರ ವಿಪಕ್ಷಗಳ 13 ಸಂಸದರು ಅಮಾನತುಗೊಂಡಿದ್ದರು. ಈಗ ಮತ್ತೊಂದು ಸುತ್ತಿನಲ್ಲಿ 31 ಸಂಸದರು ಅಮಾನತುಗೊಂಡಿದ್ದಾರೆ. ಇದಲ್ಲದೇ ಇನ್ನೂ ಮೂವರು ಸಂಸದರನ್ನು ವಿಶೇಷಾಧಿಕಾರ ಸಮಿತಿ ವರದಿ ಬರುವವರೆಗೆ ಅಮಾನತುಗೊಳಿಸಲಾಗಿದೆ. ಇದರರ್ಥ ಒಟ್ಟು 46 ಸಂಸದರನ್ನು ಅಮಾನತುಗೊಳಿಸಲಾಗಿದೆ. ಅವರಲ್ಲಿ 43 ಮಂದಿ ಭದ್ರತಾ ಲೋಪದ ಬಗ್ಗೆ ಗೃಹ ಸಚಿವರ ಹೇಳಿಕೆಗೆ ಆಗ್ರಹಿಸಿದ್ದಾರೆ.

Share This Article