ಬೆಳಗಾವಿ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಏರ್ಪೋರ್ಟ್ ಉದ್ಯೋಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣ ರಸ್ತೆಯಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ಕಾಜೋಲ್ ಶಿಯಾನಿ ಮೃತರು. ಘಟನೆಯಲ್ಲಿ ರೀತು ಪಾಟೀಲ ಎಂಬ ಯುವತಿ ಸೇರಿದಂತೆ ಇನ್ನೂ ನಾಲ್ವರು ಗಾಯಗೊಂಡಿದ್ದಾರೆ. ಒಂದೇ ಕಾರಿನಲ್ಲಿ ಐದು ಜನ ಬೆಳಗಾವಿ ಏರ್ಪೋರ್ಟ್ ಉದ್ಯೋಗಿಗಳು ಪ್ರಯಾಣ ಬೆಳೆಸಿದ್ದರು.
ಪಾರ್ಟಿ ಮುಗಿಸಿ ಮನೆಗೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾಜೋಲ್ ಶಿಯಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.