ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ಹೇಡಿತನಕ್ಕೆ ಸಾಕ್ಷಿ ಎಂದು ಜೆಡಿಎಸ್ ವಾಗ್ದಾಳಿ
ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಸರ್ಕಾರದ ನಡೆಗೆ ಜೆಡಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿರುವ ಜೆಡಿಎಸ್, ಪ್ರಶ್ನೆ ಕೇಳುವ ಪತ್ರಕರ್ತರನ್ನು ಕಂಡರೆ ಸರ್ಕಾರಕ್ಕೆ ನಡುಕ ಏಕೆ ಎಂದು ಪ್ರಶ್ನಿಸಿದೆ. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವುದು ಸರ್ಕಾರದ ಹೇಡಿತನಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದೆ.
ಸಚಿವರು ಹಾಗೂ ಶಾಸಕರ ಭ್ರಷ್ಟಾಚಾರವನ್ನು ಪ್ರಶ್ನಿಸಿದರೆ ಭಯವೇಕೆ? ಮಾಧ್ಯಮಗಳ ಧ್ವನಿಯನ್ನು ಅಡಗಿಸುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಲ್ಲವೇ ಎಂದು ಜೆಡಿಎಸ್ ಕಿಡಿಕಾರಿದೆ. ಸಂವಿಧಾನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವ ಸರ್ಕಾರವೇ ಇಂದು ಮಾಧ್ಯಮಗಳ ಸ್ವಾತಂತ್ರ್ಯವನ್ನು ಕಸಿಯಲು ಮುಂದಾಗಿದೆ ಎಂದು ಆರೋಪಿಸಿದೆ.
ಸರ್ಕಾರದ ಹಗರಣಗಳು, ಕಮಿಷನ್ ಆರೋಪಗಳು, ವರ್ಗಾವಣೆ ದಂಧೆ ಹಾಗೂ ಅಕ್ರಮಗಳು ಬಯಲಾಗುತ್ತವೆ ಎಂಬ ಆತಂಕದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜೆಡಿಎಸ್ ಹೇಳಿದೆ.
ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿದ್ದು, ಸತ್ಯವನ್ನು ಮುಚ್ಚಿಡುವ ಬದಲು ಪಾರದರ್ಶಕ ಆಡಳಿತ ನೀಡಬೇಕು ಎಂದು ಮುಖ್ಯಮಂತ್ರಿಗೆ ಜೆಡಿಎಸ್ ಆಗ್ರಹಿಸಿದೆ.






