ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಧಾನಸೌಧದಲ್ಲಿರುವ ಸ್ವೀಕೃತಿ ಶಾಖೆಗೆ ಯಾರಿಗೂ ಹೇಳದೆ ಕೇಳದೆ ಹಠಾತ್ ಭೇಟಿ ನೀಡುವುದರ ಮೂಲಕ ಅಲ್ಲಿರುವ ಸಿಬ್ಬಂದಿಗಳಿಗೆ ಶಾಕ್ ನೀಡಿದ್ದಾರೆ.
ವಿಧಾನಸೌಧದ ಸ್ವೀಕೃತಿ ಕಚೇರಿಯಲ್ಲಿ ಎಲ್ಲಾ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಆಗಮಿಸುತ್ತಿದ್ದಾರೆ ಎಂದು ಪರಿಶೀಲಿಸಿ ಸರಿಯಾದ ಸಮಯಕ್ಕೆ ಆಗಮಿಸದೇ ಇರುವಂತಹ ಸಿಬ್ಬಂದಿಗಳಿಗೆ ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ ಇದರ ಮೂಲಕ ವಿಧಾನಸೌಧದಲ್ಲಿರುವ ತನ್ನ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಪ್ರಯತ್ನವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಮಾಡಿದ್ದಾರೆ.
ವಿಧಾನ ಸೌಧದ ನೆಲಮಹಡಿಯಲ್ಲಿರುವ ಸ್ವೀಕೃತಿ ಮತ್ತು ರವಾನೆ ಶಾಖೆಗೆ ದಿಢೀರ್ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸರ್ಕಾರಿ ಕೆಲಸದ ವೇಳೆಯಲ್ಲಿ ಎಲ್ಲ ಸಿಬ್ಬಂದಿಗಳು ಕಡ್ಡಾಯವಾಗಿ ಸರಿಯಾದ ಸಮಯಕ್ಕೆ ಕಚೇರಿಯಲ್ಲಿ ಹಾಜರಿರಬೇಕೆಂಬ ಸೂಚನೆಯನ್ನು ನೀಡುವುದರ ಮೂಲಕ ಪ್ರತಿನಿತ್ಯ ತಡವಾಗಿ ಬರುತ್ತಿದ್ದ ಸರ್ಕಾರಿ ಸಿಬ್ಬಂದಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ಮುಖ್ಯಮಂತ್ರಿಗಳ ಈನಡೆ ಇದೀಗ ಎಲ್ಲೆಡೆ ಪ್ರಶಂಸೆಗೆ ಕಾರಣವಾಗಿದ್ದು ತಡವಾಗಿ ಬರುತ್ತಿದ್ದ ಅಧಿಕಾರಿಗಳಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.