ಸ್ವಕ್ಷೇತ್ರ ಶಿಗ್ಗಾವಿಯಲ್ಲಿ (Shiggavi) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಅಧಿಕಾರ ಶಾಶ್ವತವಲ್ಲ ಎಂದು ಭಾವುಕರಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ಸೇರಿದಂತೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿದೆ.
ಸಂಕ್ರಾಂತಿ ಬಳಿಕ ಮುಂಬರುವ ಚುನಾವಣೆ ಗುರಿಯಾಗಿಸಿಕೊಂಡು ಗುಜರಾತ್ ಮಾದರಿಯಂತೆ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡುವ ಸಾಧ್ಯತೆ ಬಗ್ಗೆ ಬಿಜೆಪಿ ಪಾಳೆಯದಲ್ಲಿ ಗಂಭೀರ ಚರ್ಚೆ ಅರಂಭವಾಗಿದೆ. ಪಕ್ಷದ ವರಿಷ್ಠರು ರಾಜ್ಯ ನಾಯಕರನ್ನು ಕರೆಸಿಕೊಂಡು ಮಾತುಕತೆ ನಡೆಸುವ ಸಾಧ್ಯತೆಯೂ ಇದೆ. ಆ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬದಲಿಸಿ ಬೇರೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಸಾಧ್ಯತೆ ಬಗ್ಗೆಯೂ ಸ್ಪಷ್ಟಚಿತ್ರಣ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ.
ಗುಜರಾತ್ನಲ್ಲಿ ಏಕಾಏಕಿ ಮಾಡಿದಂತೆ ಕರ್ನಾಟಕದಲ್ಲೂ ಎಲ್ಲ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ಕಲ್ಪಿಸುವ ಬಗ್ಗೆ ಮಾತು ಕೇಳಿಬರುತ್ತಿದ್ದರೂ ಆ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ. ಆದರೆ, ಜಾತಿ ಸಮೀಕರಣ ಮತ್ತು ಪ್ರಾದೇಶಿಕ ಸಮತೋಲನ ಗಮನದಲ್ಲಿ ಇಟ್ಟುಕೊಂಡು ಸಂಪುಟಕ್ಕೆ ಮೇಜರ್ ಸರ್ಜರಿ ಮಾಡುವ ಬಗ್ಗೆ ಬಿಜೆಪಿ ಪಾಳೆಯದ ಚರ್ಚೆ ನಡೆದಿದೆ ಎನ್ನಲಾಗಿದೆ.