ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ. ವಿ. ಸದಾನಂದ ಗೌಡ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಸಂಪುಟ ವಿಸ್ತರಣೆಯಾಗಲಿದ್ದು, ಕರ್ನಾಟಕದ ನಾಲ್ವರು ಸಂಪುಟ ಸೇರಲಿದ್ದಾರೆ.
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸದಾನಂದ ಗೌಡ ಸಚಿವ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ. ಸದಾನಂದ ಗೌಡರ ಹೇಳಿಕೆಯನ್ನು ಪಿಟಿಐ ವರದಿ ಮಾಡಿದೆ.
68 ವರ್ಷದ ಡಿ. ವಿ. ಸದಾನಂದ ಗೌಡ ಬೆಂಗಳೂರು ಉತ್ತರ ಕ್ಷೇತ್ರದ ಸಂಸದರು. ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಎರಡು ಬಾರಿ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಯಾಗಿಯೂ ಕಾರ್ಯ ನಿರ್ವಹಣೆ ಮಾಡಿದ್ದಾರೆ.
ಕರ್ನಾಟಕದ ನಾಲ್ವರಿಗೆ ಸಚಿವ ಸ್ಥಾನ; ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಕರ್ನಾಟಕದ ನಾಲ್ವರು ಸಚಿವರಾಗಿ ಸೇರ್ಪಡೆಗೊಳ್ಳಲಿದ್ದಾರೆ. ಡಿ. ವಿ. ಸದಾನಂದ ಗೌಡ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಸೇರ್ಪಡೆಗೊಳ್ಳುತ್ತಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಬೀದರ್ ಸಂಸದ ಭಗವಂತ ಖೂಬಾ, ಚಿತ್ರದುರ್ಗ ಸಂಸದ ಆನೇಕಲ್ ನಾರಾಯಣಸ್ವಾಮಿ ಮತ್ತು ರಾಜ್ಯಸಭಾ ಸದ್ಯರಾಗಿರುವ ರಾಜೀವ್ ಚಂದ್ರಶೇಖರ್ ಸಚಿವರಾಗಲಿದ್ದಾರೆ.
ಸಂಜೆ 6 ಗಂಟೆಗೆ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಆರೋಗ್ಯ ಸಚಿವರಾಗಿದ್ದ ಡಾ. ಹರ್ಷವರ್ಧನ್ ಸೇರಿದಂತೆ ಅನೇಕ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಾರೆ.