No menu items!
2.7 C
Munich
Monday, April 20, 2026

ಸರಕಾರದ ವಿರುದ್ಧ ಬೀದಿಗಿಳಿಯಲು ರೆಡಿಯಾದ್ರಾ ಸಿದ್ದರಾಮಯ್ಯ?

Must read

ಬೆಂಗಳೂರು: ಕೋವಿಡ್‌ ನಿರ್ವಹಣೆ ವಿಷಯದಲ್ಲಿ ಸರಕಾರದ ನಿರ್ಲಕ್ಷ್ಯ ಮುಂದುವರಿದರೆ ಬೀದಿಗಿಳಿಯುವುದು ಅನಿವಾರ್ಯವಾಗಲಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಖಡಕ್‌ ಎಚ್ಚರಿಕೆ ಕೊಟ್ಟಿದ್ದಾರೆ.

ಕೊರೊನಾ ಸ್ಥಿತಿಗತಿ ಬಗ್ಗೆ ಕಾಂಗ್ರೆಸ್‌ ಶಾಸಕರು, ಸಂಸದರೊಂದಿಗೆ ಸಿದ್ದರಾಮಯ್ಯ ಅವರು ಸೋಮವಾರ ವಿಡಿಯೋ ಸಂವಾದ ನಡೆಸಿ,”ಕೆಪಿಸಿಸಿ ಅಧ್ಯಕ್ಷರು ಹಾಗೂ ಹಿರಿಯರ ಜತೆ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು,” ಎಂದರು.

”ಕ್ಷೇತ್ರಗಳಲ್ಲಿ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಹಾಸಿಗೆ, ಆಮ್ಲಜನಕ, ವೆಂಟಿಲೇಟರ್‌ಗಳ ತೀವ್ರ ಕೊರತೆಯಿದೆ,” ಎಂದು ಶಾಸಕರು ಗಮನ ಸೆಳೆದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ,”ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೊರೊನಾ ನಿಯಂತ್ರಣದಲ್ಲಿ ವಿಫಲವಾಗಿರುವುದಾಗಿ ಜನರು ಶಾಪ ಹಾಕುತ್ತಿದ್ದಾರೆ. ತಜ್ಞರು ಸಹ ಎಚ್ಚರಿಕೆಯ ಮಾಹಿತಿ ನೀಡಿದ್ದರೂ, ಎರಡನೆ ಅಲೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಿಲ್ಲ. ಮುಂಜಾಗ್ರತೆ ಕೈಗೊಳ್ಳಲಿಲ್ಲ. ತಜ್ಞರ ತಂಡ ಕಳೆದ ವರ್ಷ ನವೆಂಬರ್‌ನಲ್ಲೇ ವರದಿ ನೀಡಿತ್ತು. ಆದರೆ, ಸರಕಾರ ನಡೆಸುವವರು ಚುನಾವಣೆಯಲ್ಲಿ ಮೈಮರೆತಿದ್ದರು. ಹಾಗಾಗಿ ತಜ್ಞರ ಶಿಫಾರಸಿನ ಬಗ್ಗೆ ನಿರ್ಲಕ್ಷ್ಯ ಮಾಡಿದರು. ಚುನಾವಣೆ ನಡೆಸಿದ್ದರಿಂದ ಜನ ಸೇರುವಂತಾಯಿತು. ಇದರಿಂದ ಸೋಂಕು ವ್ಯಾಪಕವಾಗಿ ಹರಡಿತು. ಸ್ವತಃ ಸಿಎಂ ಅವರೇ ಪ್ರಚಾರ ಸಭೆಯಲ್ಲಿ ಭಾಗಿಯಾದರು. ಕೇರಳದಲ್ಲಿ ಈ ರೀತಿ ಆಗಲಿಲ್ಲ. ಸೋಂಕು ನಿಯಂತ್ರಿಸುವಲ್ಲಿ ಅಲ್ಲಿನ ಸರಕಾರ ಸಫಲವಾಗಿದೆ,” ಎಂದರು.

”ಕೊರೊನಾ ಸೋಂಕಿನಲ್ಲಿ ಬೆಂಗಳೂರಿಗೆ ಇಡೀ ದೇಶದಲ್ಲೇ ನಂಬರ್‌ ಒನ್‌ ಸ್ಥಾನ ಸಿಕ್ಕಿದೆ. ರಾಜ್ಯದಲ್ಲಿ ಸೋಂಕಿತರಿಗೆ ಅಗತ್ಯ ಚಿಕಿತ್ಸೆ ಸಿಗುತ್ತಿಲ್ಲ. ನಾವು ಸರಕಾರಕ್ಕೆ ಹೇಳಿ ಸಾಕಾಯಿತು. ಇದೇ ರೀತಿ ಅಸಡ್ಡೆ ತೋರಿದರೆ ಬೀದಿಗಿಳಿಯುವುದು ಅನಿವಾರ್ಯ. ಅನೇಕ ಕ್ಷೇತ್ರಗಳಲ್ಲಿ ಶಾಸಕರು ಸೋಂಕಿತರಿಗೆ ನೆರವಾಗುತ್ತಿದ್ದಾರೆ,” ಎಂದು ಹೇಳಿದರು.

ಕೋವಿಡ್‌ ನಿರ್ವಹಣೆಯಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್‌, ಆಕ್ಸಿಜನ್‌, ರೆಮ್‌ಡೆಸಿವಿರ್‌ ಕೊರತೆಯಿದೆ. ಇದನ್ನು ನಿವಾರಿಸಲು ಕೂಡಲೇ ಕ್ರಮ ಕೈಗೊಳ್ಳಲು ಸರಕಾರದ ಮೇಲೆ ಒತ್ತಡ ತರಬೇಕು. ಸಿಲಿಂಡರ್‌ಗಳು ಕಾಳಸಂತೆಯಲ್ಲಿ ಮಾರಾಟವಾಗುತ್ತಿವೆ. ಈ ಮೂಲಕ ಕೃತಕ ಅಭಾವ ಸೃಷ್ಟಿಸಲಾಗಿದೆ. 18 ರಿಂದ 45 ವರ್ಷದವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ನೀಡಿದರೂ ಲಸಿಕೆ ನೀಡಲು ಕ್ರಮ ಕೈಗೊಂಡಿಲ್ಲ ಎಂದು ಶಾಸಕರು ದೂರಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್‌, ಆರ್‌.ಧ್ರುವನಾರಾಯಣ, ಈಶ್ವರ ಖಂಡ್ರೆ, ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ್‌ ಪಾಲ್ಗೊಂಡಿದ್ದರು.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article