ಸಾರಿಗೆ ಇಲಾಖೆಯಲ್ಲಿ ನಕಲಿ ಡಿಪ್ಲೊಮಾ ಪ್ರಮಾಣಪತ್ರ ಆರೋಪ: ನಿವೃತ್ತ ನ್ಯಾಯಾಧೀಶರಿಂದ ತನಿಖೆ

tnit editors
1 Min Read

ಸಾರಿಗೆ ಇಲಾಖೆಯಲ್ಲಿ ನಕಲಿ ಡಿಪ್ಲೊಮಾ ಪ್ರಮಾಣಪತ್ರ ಆರೋಪ: ನಿವೃತ್ತ ನ್ಯಾಯಾಧೀಶರಿಂದ ತನಿಖೆ

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ ಲಿಪಿಕ ವರ್ಗದ ನೌಕರರು ಬಡ್ತಿ ಪಡೆಯಲು ನಕಲಿ ಡಿಪ್ಲೊಮಾ ಪ್ರಮಾಣಪತ್ರ ಬಳಸಿದ ಆರೋಪ ಕೇಳಿಬಂದಿದ್ದು, ಈ ಕುರಿತು ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ವಿಧಾನಪರಿಷತ್‌ನಲ್ಲಿ ಶಾಸಕ ಟಿ.ಎ. ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೇಲ್ನೋಟಕ್ಕೆ ಅಕ್ರಮ ನಡೆದಿರುವುದು ಕಂಡುಬಂದಿದೆ ಎಂದು ಹೇಳಿದರು. ಈ ಪ್ರಕರಣದಲ್ಲಿ ಸಾರಿಗೆ ಇಲಾಖೆ ಮಾತ್ರವಲ್ಲದೆ ತಾಂತ್ರಿಕ ಶಿಕ್ಷಣ ಇಲಾಖೆಯೂ ಭಾಗಿಯಾಗಿರುವ ಸಾಧ್ಯತೆ ಇದೆ. ಹೀಗಾಗಿ ನಿವೃತ್ತ ನ್ಯಾಯಾಧೀಶ ನಾರಾಯಣ ಅವರ ನೇತೃತ್ವದಲ್ಲಿ ತನಿಖೆ ನಡೆಸಲು ಈಗಾಗಲೇ ಗೆಜೆಟ್ ನೋಟಿಫಿಕೇಶನ್ ಹೊರಡಿಸಲಾಗಿದೆ ಎಂದು ತಿಳಿಸಿದರು.

ಈ ವೇಳೆ ಮಾತನಾಡಿದ ಶಾಸಕ ಟಿ.ಎ. ಶರವಣ, ಕೆಸಿಎಸ್‌ಆರ್ ಕಾಯ್ದೆಯ ಪ್ರಕಾರ ನಕಲಿ ಪ್ರಮಾಣಪತ್ರ ನೀಡಿದವರ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಮೈಸೂರು ಮತ್ತು ಬೆಳಗಾವಿಯಲ್ಲಿ ಪರೀಕ್ಷೆ ಬರೆದು ಕೇವಲ ಒಂದು ಗಂಟೆಯಲ್ಲಿ ಬೆಂಗಳೂರಿಗೆ ಬಂದು ಮತ್ತೊಂದು ಪರೀಕ್ಷೆ ಬರೆಯುವುದು ಹೇಗೆ ಸಾಧ್ಯ? ಅವರಿಗೆ ಪ್ರಮಾಣಪತ್ರ ಹೇಗೆ ನೀಡಲಾಯಿತು ಎಂಬುದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಹೇಳಿದರು.

ಉದ್ಯೋಗ ಸಮಸ್ಯೆಯಿಂದ ಸಾಕಷ್ಟು ಯುವಕರು ಸಂಕಷ್ಟ ಅನುಭವಿಸುತ್ತಿದ್ದು, ನೇಮಕಾತಿಗಾಗಿ ಕಾಯುತ್ತಿರುವವರಿಗೆ ನ್ಯಾಯ ದೊರೆಯಬೇಕು ಎಂದು ಅವರು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ರಾಮಲಿಂಗಾರೆಡ್ಡಿ, ತಪ್ಪು ಮಾಡಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

Share This Article