ಹಾಸನ ಪೆನ್‌ ಡ್ರೈವ್ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ರಾಗಾ.. !

0
25

ಬೆಂಗಳೂರು: ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಪ್ರಕರಣದ ಸಂತ್ರಸ್ತ ಮಹಿಳೆಯರ ಜೊತೆಗೆ ನಾವೆಲ್ಲರೂ ಪಕ್ಷಾತೀತವಾಗಿ ನಿಲ್ಲಬೇಕು ಎಂದು ಸಂಸದ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಹಾಸನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಸಿಎಂ ಸಿದ್ದರಾಮಯ್ಯಗೆ ಪತ್ರವನ್ನು ಬರೆದಿದ್ದಾರೆ. ಪತ್ರದಲ್ಲಿ ಘಟನೆಯ ಬಗ್ಗೆ ಅವರು ತೀವ್ರ ಆತಂಕವನ್ನು ವ್ಯಕ್ತಪಡಿಸಿದ್ದು, ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಸಂತ್ರಸ್ತ ಮಹಿಳೆಯರ ಪರವಾಗಿ ನಿಲ್ಲುವಂತೆ ಮನವಿ ಮಾಡಿದ್ದಾರೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಪ್ರಜ್ವಲ್ ಪರವಾಗಿ ಮತಯಾಚನೆ ಮಾಡಿರುವುದಕ್ಕೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿ ಪತ್ರದಲ್ಲಿ ಏನಿದೆ?
ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಮೇಲೆ ಕಳೆದ ಅನೇಕ ವರ್ಷಗಳಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಪ್ರಜ್ವಲ್‌ ನ್ನು ಓರ್ವ ಸಹೋದರನಾಗಿ, ಮಗನಾಗಿ ನೋಡಿಕೊಂಡವರ ಮೇಲೂ ಆತ ಅತ್ಯಾಚಾರ ಮಾಡಿ ದೌರ್ಜನ್ಯ ಎಸಗಿದ್ದಾನೆ. ಈ ಕೃತ್ಯಕ್ಕೆ ಕಠಿಣ ಶಿಕ್ಷೆಯಾಗಬೇಕು.
ಹಾಸನದ ಪೆನ್‌ಡ್ರೈವ್ ಹಗರಣದ ಬಗ್ಗೆ ಸ್ಥಳೀಯರಾದ ದೇವರಾಜೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಡಿಸೆಂಬರ್ 2023 ರಲ್ಲೇ ತಿಳಿಸಿದ್ದಾರೆ. ಆರೋಪಕ್ಕೆ ಪೂರಕವಾದ ದಾಖಲೆಗಳನ್ನು ಕೂಡಾ ನೀಡಿದ್ದಾರೆ. ಹೀಗೆ ಪ್ರಜ್ವಲ್ ರೇವಣ್ಣ ಕುರಿತಾಗಿ ಆರೋಪಗಳನ್ನು ಬಿಜೆಪಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರ ಗಮನಕ್ಕೆ ತಂದಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜ್ವಲ್ ರೇವಣ್ಣ ಪರವಾಗಿ ಲೋಕಸಭೆ ಚುನಾವಣೆಯಲ್ಲಿ ಮತಯಾಚನೆ ಮಾಡಿದ್ದಾರೆ.
ಅಲ್ಲದೆ ಇದೀಗ ಪ್ರಜ್ವಲ್ ರೇವಣ್ಣ ತನಿಖೆಯನ್ನು ತಪ್ಪಿಸಲು ವಿದೇಶಕ್ಕೆ ತೆರಳಲು ಕೇಂದ್ರ ಸರ್ಕಾರವೇ ಅವಕಾಶ ಮಾಡಿ ಕೊಟ್ಟಿದೆ. ಇಂತಹ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸದಾ ಮೌನಕ್ಕೆ ಜಾರುತ್ತಾರೆ. ಇದೊಂದೇ ಅಲ್ಲ, ಮನಿಪುರದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯಗಳು ನಡೆದಾಗ, ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಾಗ ಪ್ರಧಾನಿ ಮೌನ ಆರೋಪಿಗಳಿಗೆ ಅನುಕೂಲಕರವಾಗಿ ಪರಿಣಮಿಸಿದೆ.

ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಸದಾ ದೌರ್ಜನ್ಯಕ್ಕೆ ಒಳಗಾಗ ಸಹೋದರಿಯರ ಪರವಾಗಿ ನಿಲ್ಲಲಿದೆ. ಇದು ನಮ್ಮ ಕರ್ತವ್ಯವೂ ಹೌದು. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸರ್ಕಾರ ಈಗಾಗಲೇ ಎಸ್‌ಐಟಿ ರಚನೆ ಮಾಡಿದೆ. ಅಲ್ಲದೆ ಪ್ರಜ್ವಲ್ ರೇವಣ್ಣ ಅವರು ಬಳಸಿದ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಲು ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಇನ್ನು ಈ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯರ ಜೊತೆಗೆ ನಾವೆಲ್ಲರೂ ನಿಲ್ಲಬೇಕಾಗಿದೆ. ನ್ಯಾಯಕ್ಕಾಗಿ ಅವರು ನಡೆಸುತ್ತಿರುವ ಹೋರಾಟಕ್ಕೆ ನಮ್ಮೆಲ್ಲರ ಬೆಂಬಲದ ಅಗತ್ಯ ಇದೆ. ಇದನ್ನು ಪಕ್ಷಾತೀತವಾಗಿ ಎಲ್ಲ ಪಕ್ಷಗಳು ಮಾಡಬೇಕಾಗಿದೆ.