ಹೈಕಮಾಂಡ್ ಗೆ ವಿಶ್ವಾಸವಿರೋವರೆಗೂ ನಾನೇ ಸಿಎಂ ಅಂದ್ರು ಬಿಎಸ್ ವೈ!

admin
By admin
1 Min Read

ಬಿಜೆಪಿ ಹೈಕಮಾಂಡ್‌ಗೆ ನನ್ನ ಮೇಲೆ ವಿಶ್ವಾಸ ಇರುವರೆಗೆ ನಾನೇ ಸಿಎಂ ಎಂದು ಬಿಎಸ್‌ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಅವರು, ಎಲ್ಲಿಯವರೆಗೆ ಹೈಕಮಾಂಡ್‌ಗೆ ನನ್ನ ಮೇಲೆ ವಿಶ್ವಾಸವಿರುತ್ತದೆಯೊ ಅಲ್ಲಿಯವರೆಗೆ ನಾನು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದರು.


ನಾಯಕತ್ವ ಬದಲಾವಣೆ ಕುರಿತು ನಾನು ಯಾವುದೇ ಪ್ರತಿಕ್ರಿಯೆ ವ್ಯಕ್ತಪಡಿಸುವುದಿಲ್ಲ, ಯಾವ ದಿನ ಯಡಿಯೂರಪ್ಪನವರೇ ನೀವು ಬೇಡ ಎಂದು ಹೈಕಮಾಂಡ್‌ ಹೇಳುತ್ತೋ ಆ ದಿನ ನಾನು ರಾಜೀನಾಮೆ ಕೊಟ್ಟು ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಆದ್ದರಿಂದ ನಾನು ಯಾವುದೇ ಗೊಂದಲದಲ್ಲಿ ಇಲ್ಲ, ನನಗೊಂದು ಅವಕಾಶ ಮಾಡಿಕೊಟ್ಟಿದ್ದಾರೆ, ಅದನ್ನು ಶಕ್ತಿಮೀರಿ ಸದುಪಯೋಗ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತೇನೆ. ಉಳಿದಿದ್ದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎನ್ನುವ ಮೂಲಕ ನಾಯಕತ್ವ ಬದಲಾವಣೆಯ ಚರ್ಚೆಗೆ ತಿರುಗೇಟು ನೀಡಿದರು.
ನಾನು ಯಾರ ಬಗ್ಗೆಯೂ ಟೀಕೆ ಮಾಡಲು ಹೋಗಲ್ಲ. ಕರ್ನಾಟಕದಲ್ಲಿ ಪರ್ಯಾಯ ನಾಯಕತ್ವಕ್ಕೆ ಸೂಕ್ತ ವ್ಯಕ್ತಿ ಇಲ್ಲ ಎಂಬುವುದನ್ನು ನಾನು ಒಪ್ಪಲ್ಲ ಎಂದು ಇದೇ ವೇಳೆ ತಿಳಿಸಿದರು. ಇನ್ನು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿಯವರು ಭೇಟಿ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ವರ್ಗಾವಣೆ ವಿಚಾರವಾಗಿ ಭೇಟಿಯಾಗಿದ್ದಾರೆ. ವರ್ಗಾವಣೆ ಆದೇಶದ ಬಗ್ಗೆ ಮರುಪರಿಶೀಲನೆ ಮಾಡುವ ಪ್ರಶ್ನೆ ಇಲ್ಲ. ಬಂದು ರಿಪೋರ್ಟ್‌ ಮಾಡಲು ಹೇಳಿದ್ದೇನೆ ಎಂದು ತಿಳಿಸಿದರು.


ರಾಜ್ಯದಲ್ಲಿ ಬಿಜೆಪಿ ನಾಯಕತ್ವದ ಬದಲಾವಣೆ ಚರ್ಚೆ ನಡೆಯುತ್ತಿದೆ. ಸಚಿವ ಸಿ.ಪಿ ಯೋಗೀಶ್ವರ್‌ ಹಾಗೂ ಇತರ ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಪ್ರಯತ್ನ ನಡೆಸಿದ್ದಾರೆ. ಈ ನಡುವೆ ಸಿಎಂ ಪುತ್ರ ವಿಜಯೇಂದ್ರ ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಎಲ್ಲಾ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ.

Share This Article