ನಟ ಪ್ರಕಾಶ್ ರಾಜ್ ಅವರ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ್ದ ಪ್ರಕರಣದಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಇಂದು ನಡೆದ ವಿಚಾರಣೆಯಲ್ಲಿ ಕೋರ್ಟ್ ಕಸ್ಟಡಿಗೆ ಪಡೆದಿದೆ.
ನಟ ಪ್ರಕಾಶ್ ರಾಜ್ ಅವರು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ರವರ ವಿರುದ್ಧ ಅವಹೇಳನಕಾರಿ ಟ್ವೀಟ್ಗೆ ಸಂಬಂಧಿಸಿದಂತೆ ಮೈಸೂರಿನ ನ್ಯಾಯಾಲಯದಲ್ಲಿ 1 ರೂ.ಗೆ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದರು. ಈ ಪ್ರಕರಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿತ್ತು.
ಆದರೆ, ಸತತವಾಗಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಖುದ್ದು ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಫೆ.23ರಂದು ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು. ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದಿದ್ದು ಪೊಲೀಸರ ಜೊತೆ ಹೊರಗೆ ಕೂರುವಂತೆ ಆದೇಶ ನೀಡಿದೆ. ಇಂದು ಖುದ್ದು ಸಂಸದರು ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಆಗ ನ್ಯಾಯಮೂರ್ತಿ ರಾಮಚಂದ್ರ ಡಿ ಹುದ್ದಾರ್ ಪೊಲೀಸರ ಜೊತೆ ಹೊರಗೆ ಕೂರುವಂತೆ ಆದೇಶಿಸಿದರು. ಪ್ರತಾಪ್ ಸಿಂಹ ಅವರು ನ್ಯಾಯಾಲಯಕ್ಕೆ ಹಾಜರಾದ ಹಿನ್ನಲೆಯಲ್ಲಿ ಜಾಮೀನು ರಹಿತ ವಾರೆಂಟ್ ವಾಪಸ್ ಪಡೆಯುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಕಳೆದ ವರ್ಷ ಪ್ರಕಾಶ್ ರಾಜ್ ಅವರು ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದರು. ಪರ್ತಕರ್ತೆ ಗೌರಿ ಹತ್ಯೆ ಸಂಬಂಧ ರಾಜ್ ಮತ್ತು ಪ್ರತಾಪ್ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವಾಗ್ವಾದ ನಡೆಯುತ್ತಿತ್ತು. ಈ ನಡುವೆ ಗೌರಿ ಹತ್ಯೆ ವಿಚಾರವಾಗಿ ಪ್ರಕಾಶ್ ರಾಜ್ ಪ್ರಧಾನಿಯನ್ನು ಟೀಕಿಸಿದ್ದರು. ಇದಕ್ಕೆ ಟ್ವಿಟರ್ ಮೂಲಕ ತಿರುಗೇಟು ನೀಡಲು ಹೋಗಿದ್ದ ಸಂಸದ ಪ್ರತಾಪ್ ಸಿಂಹ, ” ಮಗ ಮೃತಪಟ್ಟಿದ್ದರೂ ಡ್ಯಾನ್ಸರ್ ಹಿಂದೆ ಓಡಾಡಿದವರಿಗೆ ಪ್ರಧಾನಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ,” ಎಂದು ಟ್ವೀಟಿಸಿದ್ದರು. ಮಗನ ಸಾವನ್ನು ಅಣಕಿಸುವಂತೆ ಟೀಕಿಸಿರುವ ಪ್ರತಾಪ್ಸಿಂಹ ಅವರಿಗೆ ವಿವರಣೆ ಕೇಳಿ ರಾಜ್ ಲೀಗಲ್ ನೋಟಿಸ್ ನೀಡಿದ್ದರು. ಒಟ್ಟಿನಲ್ಲಿ ಒಂದು ರೂಪಾಯಿ ಮಾನನಷ್ಟ ಮೊಖದ್ದಮೆಗೆ ಇಂದು ಪ್ರತಾಪ್ ಸಿಂಹ ಸಂಕಷ್ಟಕ್ಕೆ ಸಿಲುಕಿದಂತಾಗಿದೆ.