No menu items!
10.4 C
Munich
Thursday, May 14, 2026

ಜಮೀನು ಖಾತೆ ಬದಲಾವಣೆಗೆ ₹30 ಸಾವಿರ ಲಂಚಕ್ಕೆ ಬೇಡಿಕೆ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇಬ್ಬರು ಅಧಿಕಾರಿಗಳು

Must read

ಜಮೀನು ಖಾತೆ ಬದಲಾವಣೆಗೆ ₹30 ಸಾವಿರ ಲಂಚಕ್ಕೆ ಬೇಡಿಕೆ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇಬ್ಬರು ಅಧಿಕಾರಿಗಳು

ಚಿಕ್ಕಮಗಳೂರು: ಜಮೀನಿನ ಖಾತೆ ಬದಲಾವಣೆ ಮಾಡಿಕೊಡುವುದಾಗಿ ರೈತನೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಕಂದಾಯ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕು ಕಚೇರಿಯಲ್ಲಿ ನಡೆದಿದೆ.
ತರೀಕೆರೆ ತಾಲೂಕಿನ ರೈತರೊಬ್ಬರು ತಮ್ಮ ಜಮೀನಿನ ಖಾತೆ ಬದಲಾವಣೆಗಾಗಿ ಸಂಬಂಧಿಸಿದ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ರೆವೆನ್ಯೂ ಇನ್ಸ್ಪೆಕ್ಟರ್ (ಆರ್ಐ) ರಮೇಶ್ ಹಾಗೂ ಗ್ರಾಮ ಲೆಕ್ಕಾಧಿಕಾರಿ (ವಿಎ) ಸಂತೋಷ್ ಒಟ್ಟು ₹30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.
ಅಧಿಕಾರಿಗಳ ಲಂಚದ ಬೇಡಿಕೆಯಿಂದ ಬೇಸತ್ತ ರೈತರು ಹಣ ನೀಡಲು ನಿರಾಕರಿಸಿ, ಚಿಕ್ಕಮಗಳೂರು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪೂರ್ವಭಾವಿಯಾಗಿ ಕಾರ್ಯಾಚರಣೆ ರೂಪಿಸಿ ಬುಧವಾರ ತರೀಕೆರೆ ತಾಲೂಕು ಕಚೇರಿಯಲ್ಲಿ ದಾಳಿ ನಡೆಸಿದರು.
ರೈತನಿಂದ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಇಬ್ಬರು ಅಧಿಕಾರಿಗಳನ್ನು ರೆಡ್ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ ಲಂಚದ ಹಣವನ್ನು ವಶಪಡಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.
ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಂಡದ ಇತರ ಅಧಿಕಾರಿಗಳೂ ಭಾಗವಹಿಸಿದ್ದರು. ಲಂಚದ ಬೇಡಿಕೆಯ ಹಿಂದೆ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ದಿಕ್ಕಿನಲ್ಲಿಯೂ ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.
ತಾಲೂಕು ಕಚೇರಿ ಆವರಣದಲ್ಲೇ ನಡೆದ ಈ ದಾಳಿ ಸಾರ್ವಜನಿಕರ ಗಮನ ಸೆಳೆದಿದ್ದು, ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ರೈತರು ತಮ್ಮ ಕೆಲಸಗಳಿಗಾಗಿ ಲಂಚ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ದುರಂತಕರ ಬೆಳವಣಿಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -spot_img

More articles

- Advertisement -spot_img

Latest article