ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ಅವಮಾನ ಮಾಡಿದೆ: ಛಲವಾದಿ ನಾರಾಯಣಸ್ವಾಮಿ
ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಅಗೌರವದಿಂದ ನಡೆಸಿಕೊಂಡಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ಟೀಕೆ ಮಾಡಿದ್ದಾರೆ.
ಬೀದರ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಗೌರವಪೂರ್ವಕವಾಗಿ ನಡೆಸಿಕೊಳ್ಳಲಿಲ್ಲ. ಆದರೂ ತಮ್ಮ ಹಿರಿತನಕ್ಕೆ ಧಕ್ಕೆ ಬಾರದಂತೆ ಸಿದ್ದರಾಮಯ್ಯ ತಮ್ಮ ನೋವನ್ನು ಹೊರಹಾಕುತ್ತಿಲ್ಲ,” ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ಸಂಸ್ಕೃತಿಯೇ ಇದೇ ರೀತಿಯಾಗಿದೆ ಎಂದು ಆರೋಪಿಸಿದ ಅವರು, “ಇದು ಬಂಡವಾಳಶಾಹಿಗಳಿಗೆ ಮಣೆ ಹಾಕುವ ಪಕ್ಷ. ಹೈಕಮಾಂಡ್ ಮಾನವೀಯತೆಯಿಂದ ನಡೆದುಕೊಳ್ಳಬೇಕಿತ್ತು. ಆದರೆ ಆ ರೀತಿಯ ವರ್ತನೆ ಕಾಣಿಸಲಿಲ್ಲ,” ಎಂದು ಕಿಡಿಕಾರಿದರು.
“ಮೊದಲು ಹೈಕಮಾಂಡ್ ‘ಸಿದ್ದರಾಮಯ್ಯ ಜೀ’ ಎಂದು ಗೌರವದಿಂದ ಮಾತನಾಡುತ್ತಿತ್ತು. ಈಗ ‘ಯೂ ಮಸ್ಟ್ ರಿಸೈನ್’ ಎಂದು ಹೇಳುತ್ತಿದೆ. ಹೈಕಮಾಂಡ್ ನನ್ನನ್ನು ಗೌರವಿಸಲಿಲ್ಲ ಎಂದು ಸಿದ್ದರಾಮಯ್ಯ ತಮ್ಮ ಆಪ್ತರ ಬಳಿ ನೋವು ಹಂಚಿಕೊಂಡಿದ್ದಾರೆ,” ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಒಂದು ತಿಂಗಳ ಕಾಲಾವಕಾಶ ನೀಡುವಂತೆ ಸಿದ್ದರಾಮಯ್ಯ ಹೈಕಮಾಂಡ್ಗೆ ಮನವಿ ಮಾಡಿಕೊಂಡಿದ್ದರು ಎಂದು ಅವರು ಹೇಳಿದರು. “ಆದರೆ ಒಂದು ದಿನವೂ ಅವಕಾಶ ನೀಡದೆ ತಕ್ಷಣ ರಾಜೀನಾಮೆ ನೀಡಿ ಎಂದು ಸೂಚಿಸಲಾಗಿದೆ,” ಎಂದು ಆರೋಪಿಸಿದರು.



