ಜಮೀರ್ ಆಡಿಯೋ ವಿವಾದ: ಹೈಕಮಾಂಡ್ ಎಲ್ಲವನ್ನೂ ಗಮನಿಸಿದೆ, ತೀರ್ಮಾನ ಅವರದೇ – ಎಸ್.ಎಸ್. ಮಲ್ಲಿಕಾರ್ಜುನ್
ನವದೆಹಲಿ: ದಾವಣಗೆರೆ ಉಪಚುನಾವಣೆಗೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿರುವ ಪ್ರಕರಣಕ್ಕೆ ಕಾಂಗ್ರೆಸ್ ನಾಯಕ ಎಸ್.ಎಸ್. ಮಲ್ಲಿಕಾರ್ಜುನ್ ಪ್ರತಿಕ್ರಿಯೆ ನೀಡಿದ್ದು, ಈ ವಿಚಾರವನ್ನು ಪಕ್ಷದ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, “ಜಮೀರ್ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಈಗ ಬಹಿರಂಗವಾಗಿದೆ. ಇದು ಬಿಜೆಪಿಗೆ ನೆರವಾಗುವ ರೀತಿಯ ಬೆಳವಣಿಗೆಯಾಗಿದೆ. ಅವರಿಗೆ ಈಗ ‘ಮಾಡಿದ್ದುಣ್ಣೋ ಮಾರಾಯ’ ಎನ್ನುವ ಪರಿಸ್ಥಿತಿ ಬಂದಿದೆ” ಎಂದು ಟೀಕಿಸಿದರು.
ದಾವಣಗೆರೆ ಉಪಚುನಾವಣೆಯ ಸಂದರ್ಭದಲ್ಲಿ ಜಮೀರ್ ಅಹ್ಮದ್ ಖಾನ್ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡ ಸಿರಾಜ್ ನಡುವಿನ ಸಂಭಾಷಣೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಚಾರ ಹೈಕಮಾಂಡ್ ಗಮನಕ್ಕೆ ಬಂದಿದೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲಾ ಬೆಳವಣಿಗೆಗಳನ್ನು ಪರಿಶೀಲಿಸುತ್ತಿದ್ದಾರೆ. ಮುಂದಿನ ಕ್ರಮದ ಬಗ್ಗೆ ಅವರು ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ”ಎಂದರು.
ಇದೇ ವೇಳೆ, ಜಮೀರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಲ್ಲಿಕಾರ್ಜುನ್, “ನಾನು ಯಾರನ್ನಾದರೂ ಉಚ್ಛಾಟನೆ ಮಾಡಬೇಕು ಎಂದು ಹೇಳುವ ಮಟ್ಟದ ರಾಜಕೀಯ ಮಾಡುವುದಿಲ್ಲ. ಅದು ನನ್ನ ಸಂಸ್ಕೃತಿಯೂ ಅಲ್ಲ. ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವುದು ಹೈಕಮಾಂಡ್ನ ಜವಾಬ್ದಾರಿ ಎಂದು ಸ್ಪಷ್ಟಪಡಿಸಿದರು.



