ಸೂಲಿಬೆಲೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ: ನಡು ರಸ್ತೆಯಲ್ಲೇ ಕೊಚ್ಚಿ ಕೊಲೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಕೊಲೆ ಪ್ರಕರಣ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ರೌಡಿ ಶೀಟರ್ ಆಗಿದ್ದ ಖಲೀಮ್ ಖಾನ್ (35) ಎಂಬಾತನನ್ನು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ತಲವಾರ್ನಿಂದ ಕೊಚ್ಚಿ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಸೂಲಿಬೆಲೆಯಲ್ಲಿ ಹಣ್ಣಿನ ವ್ಯಾಪಾರ ನಡೆಸುತ್ತಿದ್ದ ಖಲೀಮ್ ಖಾನ್ ಅವರು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ದೇಹದ ವಿವಿಧ ಭಾಗಗಳಿಗೆ ಸುಮಾರು 8 ರಿಂದ 10 ಬಾರಿ ತಲವಾರ್ನಿಂದ ಇರಿದು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.
ಹಳೇ ವೈಷಮ್ಯದ ಹಿನ್ನೆಲೆಯಲ್ಲೇ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಕೊಲೆಯ ನಿಖರ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಸೂಲಿಬೆಲೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕಾಗಿ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ.
ಸದ್ಯ ಈ ಘಟನೆ ಸೂಲಿಬೆಲೆ ಭಾಗದಲ್ಲಿ ಸಂಚಲನ ಮೂಡಿಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.



