ಬಿಡದಿ ಟೌನ್ ಶಿಫ್ ಭಾರೀ ವಿವಾದದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ
ರಾಮನಗರ: ರೈತರ ತೀವ್ರ ವಿರೋಧದ ನಡುವೆಯೂ ಮಹತ್ವಾಕಾಂಕ್ಷಿ ಬಿಡದಿ ಟೌನ್ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಪ್ರಕಟಿಸಿದೆ.
ಯೋಜನಾ ವ್ಯಾಪ್ತಿಯ ಒಂಬತ್ತು ಕಂದಾಯ ಗ್ರಾಮಗಳ ಪೈಕಿ ಮೊದಲ ಹಂತದಲ್ಲಿ ಮೂರು ಗ್ರಾಮಗಳ ಒಟ್ಟು 518 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಈ ಸಂಬಂಧ ಬಿಡದಿ ಹೋಬಳಿಯ ಕೆಂಪಯ್ಯನಪಾಳ್ಯ, ಮಂಡಲಹಳ್ಳಿ ಹಾಗೂ ವಡೇರಹಳ್ಳಿ ಗ್ರಾಮಗಳ ಸುಮಾರು 754 ರೈತರ ಜಮೀನುಗಳ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.
ಭೂಸ್ವಾಧೀನಕ್ಕೆ ಒಳಪಡುವ ರೈತರು ಅಗತ್ಯ ದಾಖಲೆಗಳನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಸೂಚನೆ ನೀಡಿದೆ. ಸರ್ಕಾರ ಪ್ರತಿ ಎಕರೆ ಭೂಮಿಗೆ ಕನಿಷ್ಠ ₹2.14 ಕೋಟಿ ಪರಿಹಾರ ದರ ನಿಗದಿಪಡಿಸಿರುವುದಾಗಿ ತಿಳಿಸಿದೆ.
ಕಳೆದ ಒಂದೂವರೆ ವರ್ಷಗಳಿಂದ ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ರೈತರು ನಿರಂತರ ಹೋರಾಟ ನಡೆಸುತ್ತಿದ್ದು, ಕೃಷಿ ಭೂಮಿಯನ್ನು ಉಳಿಸಿಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಆದಾಗ್ಯೂ, ಯೋಜನೆಯನ್ನು ಮುಂದುವರಿಸುವ ನಿಲುವಿನಲ್ಲಿ ಸರ್ಕಾರ ಅಚಲವಾಗಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಯೋಜನೆಯನ್ನು ಮಹತ್ವಾಕಾಂಕ್ಷಿ ಅಭಿವೃದ್ಧಿ ಯೋಜನೆಯಾಗಿ ಪರಿಗಣಿಸಿದ್ದು, ಯಾವುದೇ ಹಿನ್ನಡೆಯಿಲ್ಲದೆ ಅನುಷ್ಠಾನ ಪ್ರಕ್ರಿಯೆಯನ್ನು ಮುಂದುವರಿಸುತ್ತಿದ್ದಾರೆ ಎನ್ನಲಾಗಿದೆ.



