ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಅನಂತ್ ಅಂಬಾನಿ ಭೇಟಿ
ಉಡುಪಿ: ರಾಜ್ಯದ ಪ್ರಸಿದ್ಧ ಶಕ್ತಿಪೀಠವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಪ್ರತಿದಿನ ಸಾವಿರಾರು ಭಕ್ತರು ಆಗಮಿಸುವ ಮೂಕಾಂಬಿಕಾ ಸನ್ನಿಧಿಗೆ ಅಂಬಾನಿ ಕುಟುಂಬದ ಗುರುಜಿಯೊಂದಿಗೆ ಬಂದ ಅನಂತ್ ಅಂಬಾನಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ದೇವಾಲಯದ ಸಂಪ್ರದಾಯದಂತೆ ನಡೆದ ಪೂಜಾ ವಿಧಿವಿಧಾನಗಳಲ್ಲಿ ಭಾಗವಹಿಸಿದ ಅವರು, ಮೂಕಾಂಬಿಕಾ ದೇವಿಯ ಸನ್ನಿಧಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ದೇಗುಲಕ್ಕೆ ಆಗಮಿಸಿದ ಅನಂತ್ ಅಂಬಾನಿಗೆ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಆತ್ಮೀಯ ಸ್ವಾಗತ ಕೋರಲಾಗಿದ್ದು, ಗೌರವ ಸಮರ್ಪಣೆ ಮಾಡಲಾಯಿತು.
ಮೂಲಗಳ ಪ್ರಕಾರ, ಜೂನ್ 13ರಂದು ಅನಂತ್ ಅಂಬಾನಿ ಕೊಲ್ಲೂರು ಭೇಟಿ ನೀಡಲು ನಿರ್ಧರಿಸಲಾಗಿತ್ತು. ಆದರೆ ಮುಂಬೈನಲ್ಲಿ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಪ್ರವಾಸವನ್ನು ಮುಂದೂಡಲಾಗಿತ್ತು. ಬಳಿಕ ಭಾನುವಾರ ಸಂಜೆ ಕೊಲ್ಲೂರಿಗೆ ಆಗಮಿಸಿದ ಅವರು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಅನಂತ್ ಅಂಬಾನಿ ಅವರಿಗೆ ದೇವಾಲಯಗಳು ಮತ್ತು ಧಾರ್ಮಿಕ ಕ್ಷೇತ್ರಗಳ ಬಗ್ಗೆ ವಿಶೇಷ ಭಕ್ತಿ ಹಾಗೂ ನಂಬಿಕೆ ಇದೆ. ಇತ್ತೀಚಿನ ದಿನಗಳಲ್ಲಿ ಅವರು ದೇಶದ ವಿವಿಧ ಪ್ರಸಿದ್ಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕೇರಳದ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿದ್ದ ಅವರು, ತಿರುಪತಿ ಕ್ಷೇತ್ರಕ್ಕೂ ಕುಟುಂಬ ಸಮೇತರಾಗಿ ತೆರಳಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದರು.



