ಬಾಲಕರೂ ಸುರಕ್ಷಿತರಲ್ಲವೇ?: ವಚನಾನಂದ ಶ್ರೀ ಜಾಮೀನು ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ತೀವ್ರ ಅಸಮಾಧಾನ
ಬೆಂಗಳೂರು: ವಚನಾನಂದ ಶ್ರೀಗಳಿಗೆ ಮಂಜೂರಾಗಿರುವ ನಿರೀಕ್ಷಣಾ ಜಾಮೀನನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. “ಬಾಲಕರನ್ನೂ ಬಿಟ್ಟಿಲ್ಲವೇ? ಈಗ ಬಾಲಕರೂ ಸುರಕ್ಷಿತರಲ್ಲ” ಎಂದು ನ್ಯಾಯಪೀಠ ಕಟುವಾಗಿ ಪ್ರತಿಕ್ರಿಯಿಸಿದೆ.
ಪ್ರಕರಣದ ಗಂಭೀರತೆಯನ್ನು ಉಲ್ಲೇಖಿಸಿದ ನ್ಯಾಯಾಲಯ, ಇಂತಹ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದ್ದು, ನಿಯಮಿತ ಜಾಮೀನು (ರೆಗ್ಯುಲರ್ ಬೇಲ್) ಅರ್ಜಿ ಸಲ್ಲಿಸುವುದು ಸರಿಯಾದ ಕ್ರಮ ಎಂದು ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 25ಕ್ಕೆ ಮುಂದೂಡಲಾಗಿದೆ.
ವಚನಾನಂದ ಶ್ರೀಗಳಿಗೆ ನೀಡಲಾದ ನಿರೀಕ್ಷಣಾ ಜಾಮೀನನ್ನು ಪ್ರಶ್ನಿಸಿ ಸಂತ್ರಸ್ತ ಬಾಲಕನ ತಾಯಿ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ವೇಳೆ ಕಾಲಾವಕಾಶ ಕೋರಿದ ಶ್ರೀಗಳ ಪರ ವಕೀಲರು, ಟ್ರಸ್ಟ್ ಸದಸ್ಯರು ಮತ್ತು ಸ್ವಾಮೀಜಿಗಳ ನಡುವೆ ಭಿನ್ನಾಭಿಪ್ರಾಯಗಳಿದ್ದು, ಪತ್ರಿಕಾಗೋಷ್ಠಿಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಲಾಗಿತ್ತು. ಆ ಕಾರಣದಿಂದ ಮುನ್ನೆಚ್ಚರಿಕೆಯಾಗಿ ನಿರೀಕ್ಷಣಾ ಜಾಮೀನು ಪಡೆಯಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಆದರೆ, ಜಾಮೀನು ಮಂಜೂರಾದ ವಿಧಾನವೇ ಪ್ರಶ್ನಾರ್ಹವಾಗಿದೆ ಎಂದು ಈ ಹಿಂದೆ ಹೈಕೋರ್ಟ್ ಗಮನ ಸೆಳೆದಿತ್ತು. ಮೇ 7ರಂದು ವಚನಾನಂದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದರೆ, ಅದಕ್ಕೂ ಒಂದು ದಿನ ಮುಂಚಿತವಾಗಿ ಮೇ 6ರಂದು ಅವರು ನಿರೀಕ್ಷಣಾ ಜಾಮೀನು ಪಡೆದಿರುವುದು ನ್ಯಾಯಾಲಯದ ಅಚ್ಚರಿಗೆ ಕಾರಣವಾಗಿತ್ತು.
ದೂರು ದಾಖಲಾಗುವ ಮುನ್ನವೇ ಜಾಮೀನು ಮಂಜೂರಾಗಿರುವುದು ಆಘಾತಕಾರಿ ಬೆಳವಣಿಗೆ ಎಂದು ಅಭಿಪ್ರಾಯಪಟ್ಟಿದ್ದ ಹೈಕೋರ್ಟ್, ಮೇಲ್ನೋಟಕ್ಕೆ ಜಾಮೀನು ನೀಡಿದ ಪ್ರಕ್ರಿಯೆ ಸರಿಯಾದ ರೀತಿಯಲ್ಲಿ ನಡೆದಿಲ್ಲ ಎಂಬ ಅನುಮಾನ ವ್ಯಕ್ತಪಡಿಸಿ ಶ್ರೀಗಳಿಗೆ ನೋಟಿಸ್ ಜಾರಿ ಮಾಡಿತ್ತು.
ಇದೀಗ ಹೈಕೋರ್ಟ್ನ ಈ ಆದೇಶದ ಹಿನ್ನೆಲೆಯಲ್ಲಿ, ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ವಚನಾನಂದ ಶ್ರೀಗಳ ಜಾಮೀನು ರದ್ದತಿ ಅರ್ಜಿಗೆ ಸಂಬಂಧಿಸಿದಂತೆ ಜೂನ್ 30ರಂದು ತನ್ನ ತೀರ್ಪು ಪ್ರಕಟಿಸುವ ನಿರೀಕ್ಷೆಯಿದೆ.



