ಮಾದಕ ವಸ್ತುಗಳ ವಿರುದ್ಧ ನಿರಂತರ ಹೋರಾಟ ಅಗತ್ಯ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಮಾದಕ ವಸ್ತುಗಳ ವಿರುದ್ಧ ನಿರಂತರ ಹೋರಾಟ ನಡೆಸುವುದು ಅತ್ಯಗತ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಡ್ರಗ್ ವಿರೋಧಿ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ವಿದ್ಯಾರ್ಥಿಗಳಿಗೆ ಧನ್ಯವಾದ ಸಲ್ಲಿಸಿ, ಈ ಅಭಿಯಾನವನ್ನು ರಾಜ್ಯವ್ಯಾಪಿ ಯಶಸ್ವಿಗೊಳಿಸುವ ಸಂಕಲ್ಪ ವ್ಯಕ್ತಪಡಿಸಿದರು.
ಕಳೆದ ಮೂರು ವರ್ಷಗಳಿಂದ ರಾಜ್ಯ ಪೊಲೀಸ್ ಇಲಾಖೆ ಮಾದಕ ವಸ್ತುಗಳ ವಿರುದ್ಧ ಪರಿಣಾಮಕಾರಿ ಕಾರ್ಯಾಚರಣೆ ನಡೆಸುತ್ತಿದ್ದು, ಈ ವರ್ಷ ಮಾತ್ರ 80 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸಿದರು.
“ನಮ್ಮ ಆಲೋಚನೆಗಳನ್ನು ನಾವೇ ರೂಪಿಸಿಕೊಳ್ಳಬೇಕು. ಸಂಕಲ್ಪ ಮತ್ತು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಒತ್ತಡಕ್ಕೆ ಮಣಿಯಬಾರದು. ದೇಹ ಮತ್ತು ಮನಸ್ಸಿನ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ” ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಮಕ್ಕಳಿಗೆ ಮಾದಕ ವಸ್ತುಗಳ ಚಟದ ಲಕ್ಷಣಗಳು ಕಂಡುಬಂದರೆ, ಸಮಾಜದ ಮರ್ಯಾದೆಗೆ ಅಂಜಿ ವಿಷಯವನ್ನು ಮುಚ್ಚಿಡಬೇಡಿ. ಪೊಲೀಸರ ಸಹಾಯ ಪಡೆದು, ಅವರೊಂದಿಗೆ ಕೈಜೋಡಿಸಿ ಸಮಸ್ಯೆಯನ್ನು ಎದುರಿಸಬೇಕು ಎಂದು ಪೋಷಕರಿಗೆ ಮನವಿ ಮಾಡಿದರು.
ಗುಪ್ತ ಮಾಹಿತಿ ನೀಡಿದವರಿಗೆ ಬಹುಮಾನ
ಮಾದಕ ವಸ್ತುಗಳ ಜಾಲದ ಬಗ್ಗೆ ಪೊಲೀಸರಿಗೆ ಗುಪ್ತ ಮಾಹಿತಿ ನೀಡುವ ಪೋಷಕರಿಗೆ ಸರ್ಕಾರದಿಂದ ಬಹುಮಾನ ನೀಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಘೋಷಿಸಿದರು.
2028ರೊಳಗೆ ಕರ್ನಾಟಕವನ್ನು ನಶೆಮುಕ್ತ ರಾಜ್ಯವನ್ನಾಗಿ ಮಾಡುವ ಸಂಕಲ್ಪವನ್ನು ಸರ್ಕಾರ ಮಾಡಿಕೊಂಡಿದೆ. ಇದು ಕೇವಲ ಸರ್ಕಾರದ ಘೋಷಣೆಯಲ್ಲ, ಪ್ರತಿಯೊಬ್ಬ ಕನ್ನಡಿಗನ ಸಂಕಲ್ಪವಾಗಬೇಕು. ಆದರ್ಶ ಜೀವನ ನಡೆಸುವ ಮೂಲಕ ನಮ್ಮ ಹಾಗೂ ನಮ್ಮ ಕುಟುಂಬದ ಭವಿಷ್ಯವನ್ನು ಸುರಕ್ಷಿತವಾಗಿ ನಿರ್ಮಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.



