ಮತ್ತೊಮ್ಮೆ ದರ್ಶನ್ ಜಾಮೀನು ಕನಸು ಭಗ್ನ: ʻದಾಸʼನಿಗೆ 1 ವರ್ಷ ಜೈಲೇ ಗತಿ
ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ. ಜಾಮೀನು ಪಡೆಯುವ ನಿರೀಕ್ಷೆಯಲ್ಲಿದ್ದ ದರ್ಶನ್ ಸಲ್ಲಿಸಿದ್ದ ತಿದ್ದುಪಡಿ ಅರ್ಜಿಯನ್ನು ಸುಪ್ರೀಂ ಕೋರ್ಟ್ನ ರಿಜಿಸ್ಟ್ರಿ ತಿರಸ್ಕರಿಸಿದ್ದು, ಜೈಲಿನಲ್ಲೇ ಮುಂದುವರೆಯಬೇಕಾದ ಪರಿಸ್ಥಿತಿ ಎದುರಾಗಿದೆ.
ಈ ಹಿಂದೆ ಸುಪ್ರೀಂ ಕೋರ್ಟ್, ಒಂದು ವರ್ಷದವರೆಗೆ ಜಾಮೀನು ಅರ್ಜಿ ಸಲ್ಲಿಸದಂತೆ ಸೂಚಿಸಿತ್ತು. ಈ ಆದೇಶದಲ್ಲಿ ತಿದ್ದುಪಡಿ ಮಾಡಿ, ತುರ್ತು ಸಂದರ್ಭಗಳಲ್ಲಿ ಜಾಮೀನು ಕೋರುವ ಅವಕಾಶ ನೀಡುವಂತೆ ದರ್ಶನ್ ಪರವಾಗಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಈ ಅರ್ಜಿ ವಿಚಾರಣೆಗೆ ಅರ್ಹವಲ್ಲ ಎಂದು ಸುಪ್ರೀಂ ಕೋರ್ಟ್ನ ರಿಜಿಸ್ಟ್ರಿ ಅಭಿಪ್ರಾಯಪಟ್ಟಿದ್ದು, ವಿಚಾರಣೆಗೆ ಪಟ್ಟಿ ಮಾಡಲು ಸಾಧ್ಯವಿಲ್ಲ ಎಂದು ವಕೀಲರಿಗೆ ತಿಳಿಸಿ ಅರ್ಜಿಯನ್ನು ತಿರಸ್ಕರಿಸಿದೆ.
ಕಳೆದ ಮೇ 15ರಂದು ನ್ಯಾಯಮೂರ್ತಿಗಳಾದ ಪರ್ದಿವಾಲಾ ಹಾಗೂ ವಿಜಯ್ ಬಿಷ್ಣೋಯಿ ಅವರಿದ್ದ ಪೀಠದಲ್ಲಿ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆದಿತ್ತು. ಈ ವೇಳೆ ದರ್ಶನ್ ಪರ ವಕೀಲರು, ಜೈಲಿನಲ್ಲಿ ಅವರನ್ನು ಕ್ವಾರಂಟೈನ್ ಸೆಲ್ನಲ್ಲಿ ಇರಿಸಲಾಗಿದ್ದು, ಇತರ ಕೈದಿಗಳೊಂದಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ಕುಟುಂಬ ಸದಸ್ಯರನ್ನು ಸಹ ಗಾಜಿನ ತಡೆಗೋಡೆಯ ಮೂಲಕವೇ ಭೇಟಿಯಾಗಲು ಅವಕಾಶ ಕಲ್ಪಿಸಲಾಗಿದೆ. ಕಳೆದ ಒಂಬತ್ತು ತಿಂಗಳಿಂದ ಅವರು ಜೈಲಿನಲ್ಲಿದ್ದಾರೆ ಎಂದು ವಾದ ಮಂಡಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ್ದ ನ್ಯಾಯಪೀಠ, ಕ್ವಾರಂಟೈನ್ ಸೆಲ್ ಕೂಡ ಜೈಲಿನ ಒಂದು ಭಾಗವೇ ಆಗಿದ್ದು, ವಿಶೇಷ ಸೌಲಭ್ಯ ದೊರೆಯದಂತೆ ನೋಡಿಕೊಳ್ಳುವ ಉದ್ದೇಶದಿಂದ ಅಲ್ಲಿ ಇರಿಸಿರಬಹುದು ಎಂದು ಅಭಿಪ್ರಾಯಪಟ್ಟಿತ್ತು. ಜೊತೆಗೆ, ಜೈಲು ಕೈಪಿಡಿ (ಜೈಲು ಮ್ಯಾನುಯಲ್) ನಿಯಮಾವಳಿಗಳ ಪ್ರಕಾರ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ತಿಳಿಸಿತ್ತು.
ಇದೇ ವೇಳೆ, ವಿಚಾರಣಾ ನ್ಯಾಯಾಲಯವು ಒಂದು ವರ್ಷದೊಳಗೆ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು, ಆ ಅವಧಿಯವರೆಗೆ ದರ್ಶನ್ಗೆ ಜಾಮೀನು ನೀಡಲು ನಿರಾಕರಿಸಿತ್ತು. ಈ ಆದೇಶದ ಅನ್ವಯ ಮುಂದಿನ ವರ್ಷದ ಮೇ 15ರವರೆಗೆ ದರ್ಶನ್ ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ.



