No menu items!
20 C
Munich
Saturday, July 11, 2026

ಬಾಂಗ್ಲಾದೇಶಿಯರಿಗೆ ಪಿಆರ್ಸಿ ಕೊಡುತ್ತಿದ್ದೇವೆ ಎನ್ನುವುದು ಸುಳ್ಳು: ಪ್ರಿಯಾಂಕ್ ಖರ್ಗೆ

Must read

ಬಾಂಗ್ಲಾದೇಶಿಯರಿಗೆ ಪಿಆರ್ಸಿ ಕೊಡುತ್ತಿದ್ದೇವೆ ಎನ್ನುವುದು ಸುಳ್ಳು: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕರ್ನಾಟಕ ಖಾಯಂ ನಿವಾಸ ಪ್ರಮಾಣಪತ್ರ (ಪಿಆರ್ಸಿ) ಜಾರಿಗೆ ರಾಜ್ಯ ಸರ್ಕಾರ ಮುಂದಾಗಿರುವುದನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಬಾರದು ಎಂಬ ನಿಯಮ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಾಸಿಸುವವರಿಗೆ ಸರ್ಕಾರ ಪ್ರಮಾಣಪತ್ರ ನೀಡುತ್ತಿರುವುದಷ್ಟೇ. ಪಿಆರ್ಸಿ ನೀಡುವುದಕ್ಕೆ ಕಾನೂನುಬದ್ಧ ಅಡ್ಡಿಯಿಲ್ಲ. ರಾಜ್ಯ ಸರ್ಕಾರ ಪಿಆರ್ಸಿ ನೀಡಬಾರದು ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ ಎಂದು ಹೇಳಿದರು.
ಬಿಜೆಪಿ ನಾಯಕರು ಅಕ್ರಮ ವಲಸಿಗರು ಹಾಗೂ ಬಾಂಗ್ಲಾದೇಶದವರಿಗೆ ಪಿಆರ್ಸಿ ನೀಡಲಾಗುತ್ತಿದೆ ಎಂದು ಆರೋಪಿಸುತ್ತಿದ್ದಾರೆ. ಈ ಆರೋಪಗಳಿಗೆ ಯಾವುದೇ ಆಧಾರವಿಲ್ಲ. ಪಿಆರ್ಸಿ ಅನ್ನು ಸರ್ಕಾರದ ಅಧಿಕಾರಿಗಳೇ ನೀಡುತ್ತಾರೆ. ಕಾಂಗ್ರೆಸ್ ಅಥವಾ ಪಕ್ಷದ ಕಾರ್ಯಕರ್ತರು ಪ್ರಮಾಣಪತ್ರ ನೀಡುತ್ತಿದ್ದರೆ ಪ್ರಶ್ನಿಸುವುದರಲ್ಲಿ ಅರ್ಥವಿರುತ್ತಿತ್ತು. ಆದರೆ ಸರ್ಕಾರಿ ಅಧಿಕಾರಿಗಳ ಕಾರ್ಯವೈಖರಿಯನ್ನೇ ಪ್ರಶ್ನಿಸುವುದು ಸರಿಯಲ್ಲ ಎಂದು ತಿರುಗೇಟು ನೀಡಿದರು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ನಡೆಯುತ್ತಿದ್ದು, ಅರ್ಹ ಮತದಾರರನ್ನು ಪಟ್ಟಿಯಲ್ಲಿ ಸೇರಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಪಾಸ್ಪೋರ್ಟ್, ಆಧಾರ್, ಬ್ಯಾಂಕ್ ಖಾತೆ ಹಾಗೂ ಪಿಆರ್ಸಿ ಇದ್ದರೂ ಪೌರತ್ವ ಸಾಬೀತಾಗುವುದಿಲ್ಲ ಎಂದು ಬಿಜೆಪಿ ಹೇಳುತ್ತಿದ್ದರೆ, ಹಾಗಾದರೆ ಪೌರತ್ವ ಸಾಬೀತುಪಡಿಸಲು ಯಾವ ದಾಖಲೆ ಬೇಕು ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಪ್ರಶ್ನಿಸಿದರು.
ಬಾಂಗ್ಲಾದೇಶದ ಅಕ್ರಮ ವಲಸಿಗರ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳಿಗೂ ಖರ್ಗೆ ತಿರುಗೇಟು ನೀಡಿದರು. ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿಜೆಪಿ ಅಥವಾ ಕೇಂದ್ರ ಸರ್ಕಾರದ ಆಡಳಿತ ವ್ಯವಸ್ಥೆ ಇರುವಾಗಲೇ ಅಕ್ರಮ ವಲಸಿಗರು ಬರುತ್ತಿದ್ದಾರೆ ಎಂದು ಆರೋಪಿಸುತ್ತಿರುವವರು, ಅವರು ದೇಶಕ್ಕೆ ಹೇಗೆ ಪ್ರವೇಶಿಸುತ್ತಿದ್ದಾರೆ ಎಂಬುದನ್ನು ಮೊದಲು ಉತ್ತರಿಸಬೇಕು. ಸಮಾಜದಲ್ಲಿ ಅನಗತ್ಯ ಆತಂಕ ಸೃಷ್ಟಿಸುವ ಬದಲು ತಮ್ಮ ಆರೋಪಗಳಿಗೆ ಸಾಕ್ಷ್ಯ ಒದಗಿಸಲಿ ಎಂದು ಅವರು ಸವಾಲು ಹಾಕಿದರು.

- Advertisement -spot_img

More articles

- Advertisement -spot_img

Latest article