ಅಧಿಕಾರ ದುರುಪಯೋಗ ಆರೋಪ: KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ವಜಾ – ರಾಜ್ಯಪಾಲರ ಮಹತ್ವದ ಆದೇಶ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಮಹತ್ವದ ಆದೇಶ ಹೊರಡಿಸಿದ್ದಾರೆ.
ಶಿವಶಂಕರಪ್ಪ ಸಾಹುಕಾರ ವಿರುದ್ಧ ಅಧಿಕಾರ ದುರುಪಯೋಗ, ಕರ್ತವ್ಯಲೋಪ ಹಾಗೂ ಬೇಜವಾಬ್ದಾರಿಯ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಪುತ್ರಿಯ ವಾರ್ಷಿಕ ಆದಾಯವನ್ನು ಮರೆಮಾಚಿರುವ ಆರೋಪವೂ ಅವರ ವಿರುದ್ಧ ದಾಖಲಾಗಿದೆ ಎನ್ನಲಾಗಿದೆ.
ಇದರ ಜೊತೆಗೆ, ಕಾನೂನುಬಾಹಿರವಾಗಿ ಅಧಿಕಾರ ದುರುಪಯೋಗ ಮಾಡಿಕೊಂಡಿರುವುದು ಹಾಗೂ ಪುತ್ರಿಯ ನೇಮಕಾತಿಗೆ ಸಂಬಂಧಿಸಿದಂತೆ ದೂರುಗಳು ಉಳಿದಿರುವುದನ್ನೂ ಗಂಭೀರವಾಗಿ ಪರಿಗಣಿಸಲಾಗಿದೆ.
ಈ ಎಲ್ಲ ಆರೋಪಗಳ ಸಮಗ್ರ ತನಿಖೆ ನಡೆಸುವ ಉದ್ದೇಶದಿಂದ ರಾಷ್ಟ್ರಪತಿಗೆ ಅಗತ್ಯ ತನಿಖೆಗೆ ಶಿಫಾರಸ್ಸು ಮಾಡಿರುವುದಾಗಿ ರಾಜ್ಯಪಾಲರು ತಿಳಿಸಿದ್ದಾರೆ.
ರಾಷ್ಟ್ರಪತಿಯಿಂದ ಮುಂದಿನ ಆದೇಶ ಬರುವವರೆಗೆ ಶಿವಶಂಕರಪ್ಪ ಸಾಹುಕಾರ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ, ಆಯೋಗದ ಮುಂದಿನ ಅಧ್ಯಕ್ಷರು ನೇಮಕವಾಗುವವರೆಗೆ ಹಂಗಾಮಿ ಅಧ್ಯಕ್ಷರಾಗಿ ಆಯೋಗದ ಸದಸ್ಯರು ಕಾರ್ಯನಿರ್ವಹಿಸಲಿದ್ದಾರೆ.
ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಕೃತ ಆದೇಶ ಹೊರಡಿಸಿದ್ದು, KPSC ಆಡಳಿತದಲ್ಲಿ ಮಹತ್ವದ ಬೆಳವಣಿಗೆಗೆ ಕಾರಣವಾಗಿದೆ.



