ಬಿಡದಿ ಟೌನ್ ಶಿಪ್ ಯೋಜನೆಗೆ 2 ತಿಂಗಳ ಬ್ರೇಕ್; ರೈತರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ – ಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪರ-ವಿರೋಧ ಚರ್ಚೆಗಳು ಹಾಗೂ ರೈತರ ಪ್ರತಿಭಟನೆಗಳು ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಯೋಜನೆಯನ್ನು ಎರಡು ತಿಂಗಳ ಕಾಲ ತಾತ್ಕಾಲಿಕವಾಗಿ ಮುಂದೂಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು, ಯೋಜನೆಯ ಎಲ್ಲ ಆಯಾಮಗಳನ್ನು ಪರಿಶೀಲಿಸಲು ಸಣ್ಣ ಸಮಿತಿಯೊಂದನ್ನು ರಚಿಸಲಾಗುವುದು ಎಂದರು. ಸಮಿತಿ ಎರಡು ತಿಂಗಳೊಳಗೆ ವರದಿ ಸಲ್ಲಿಸಲಿದ್ದು, ಅದರ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
“ಜಮೀನು ನೀಡಲು ಇಚ್ಛೆಯಿರುವವರು ನೀಡಬಹುದು, ಇಚ್ಛೆಯಿಲ್ಲದವರು ನೀಡುವ ಅಗತ್ಯವಿಲ್ಲ. ಇದು ನಿರಂತರ ಪ್ರಕ್ರಿಯೆ. ಎರಡು ಅಥವಾ ಮೂರು ತಿಂಗಳ ಬಳಿಕ ಸಮಿತಿ ವರದಿ ನೀಡಿದ ನಂತರ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಮಾಡುತ್ತೇವೆ” ಎಂದು ಸಿಎಂ ಹೇಳಿದರು.
ಬಿಡದಿಯಲ್ಲಿ ನಡೆದ ಪ್ರತಿಭಟನೆ ಹಾಗೂ ಉದ್ವಿಗ್ನ ಘಟನೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, “ಬಿಡದಿ ಟೌನ್ಶಿಪ್ ನನ್ನ ಕನಸಿನ ಯೋಜನೆಯಲ್ಲ. ಈ ಯೋಜನೆಗೆ ನಾನು ಅಡಿಗಲ್ಲು ಹಾಕಿಲ್ಲ. ನಾನು ಮುಖ್ಯಮಂತ್ರಿ ಆಗಿರುವುದನ್ನು ಕೆಲವರು ಸಹಿಸಿಕೊಳ್ಳಲಾಗುತ್ತಿಲ್ಲ. ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ” ಎಂದು ತಿರುಗೇಟು ನೀಡಿದರು.
ತಮ್ಮ ರೈತ ಹಿನ್ನೆಲೆಯನ್ನು ಉಲ್ಲೇಖಿಸಿದ ಡಿಕೆ ಶಿವಕುಮಾರ್, “ನಾನು ರೈತನ ಮಗ. ರೈತರ ಶ್ರಮ, ಅವರ ಭೂಮಿಯ ಮೌಲ್ಯ ಮತ್ತು ನೋವು ನನಗೆ ಚೆನ್ನಾಗಿ ಗೊತ್ತಿದೆ. ರೈತರ ಹಿತಾಸಕ್ತಿಯನ್ನು ಕಡೆಗಣಿಸಿ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ” ಎಂದು ಭರವಸೆ ನೀಡಿದರು.



