ಆಟೋರಿಕ್ಷಾ ಡಿಕ್ಕಿಯಿಂದ ಮೃತಪಟ್ಟ ಬೆಂಗಳೂರು ವಿವಿ ವಿದ್ಯಾರ್ಥಿನಿ; ಕುಟುಂಬಕ್ಕೆ ಸರ್ಕಾರದಿಂದ ₹10 ಲಕ್ಷ ನೆರವು
ಬೆಂಗಳೂರು, ಆ. 08: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ವಿದ್ಯಾರ್ಥಿನಿ ಮಾನಸ ಅವರ ಕುಟುಂಬಕ್ಕೆ ಸರ್ಕಾರದಿಂದ ಒಟ್ಟು ₹10 ಲಕ್ಷ ಪರಿಹಾರ ನೀಡಲಾಗಿದೆ.
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹3 ಲಕ್ಷ ಹಾಗೂ ಚಿಕಿತ್ಸೆ ವೆಚ್ಚದ ರೂಪದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ₹7 ಲಕ್ಷ ಸೇರಿದಂತೆ ಒಟ್ಟು ₹10 ಲಕ್ಷವನ್ನು ಮೃತ ವಿದ್ಯಾರ್ಥಿನಿಯ ಪೋಷಕರಿಗೆ ನೀಡಲಾಗಿದೆ.
ಮೈಸೂರು ಜಿಲ್ಲೆಯ ನಂಜನಗೂಡು ಮೂಲದ 23 ವರ್ಷದ ಮಾನಸ ಅವರು ಬೆಂಗಳೂರು ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದರು.
ಜುಲೈ 30ರಂದು ಜ್ಞಾನಭಾರತಿ ಕ್ಯಾಂಪಸ್ನ ಗಾಂಧಿ ಮಾರ್ಗದಲ್ಲಿರುವ ಕ್ಯಾಂಟೀನ್ ಸಮೀಪ ಮಾನಸ ಅವರು ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಆಟೋರಿಕ್ಷಾ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ನಾಗರಭಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 6ರಂದು ಮೃತಪಟ್ಟಿದ್ದರು.
ವಿದ್ಯಾರ್ಥಿನಿಯ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿರುವ ಸರ್ಕಾರ, ಸಂಕಷ್ಟದಲ್ಲಿರುವ ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ ಪರಿಹಾರ ಒದಗಿಸಿದೆ.



