ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
ಬೆಂಗಳೂರು ಗ್ರಾಮಾಂತರ: ಬೈಕ್ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ದೊಡ್ಡಬಳ್ಳಾಪುರದ 11ನೇ ಮೈಲಿ ಬಳಿ ನಡೆದಿದೆ.
ಮೃತ ಯುವಕನನ್ನು ನೆಲಮಂಗಲದ ಚಿಕ್ಕಪುಟ್ಟಯ್ಯನಪಾಳ್ಯದ ತರುಣ್ (18) ಎಂದು ಗುರುತಿಸಲಾಗಿದೆ. ಒಂದೇ ಬೈಕ್ನಲ್ಲಿ ಮೂವರು ಯುವಕರು ತ್ರಿಬಲ್ ರೈಡಿಂಗ್ ಮಾಡಿಕೊಂಡು ಇಶಾ ಫೌಂಡೇಶನ್ಗೆ ತೆರಳಿ, ವಾಪಸ್ ನೆಲಮಂಗಲಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಈ ವೇಳೆ ಬೈಕ್ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ತರುಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ನಲ್ಲಿದ್ದ ವರ್ಷಿತ್ (25) ಹಾಗೂ ಮಧುಸೂದನ್ (22) ಗಾಯಗೊಂಡಿದ್ದು, ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತದೇಹವನ್ನು ದೊಡ್ಡಬಳ್ಳಾಪುರದ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು



