ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; 14ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅನುಮತಿ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 14ನೇ ಆರೋಪಿ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯ ಅನುಮತಿ ನೀಡಿದೆ. ಇಂದು ಅರ್ಜಿಯ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್, ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ಪ್ರಕ್ರಿಯೆಗೆ ಇತರ ಆರೋಪಿಗಳು ಆಕ್ಷೇಪ ವ್ಯಕ್ತಪಡಿಸಲು ಅವಕಾಶವಿಲ್ಲ ಎಂದು ಮಹತ್ವದ ಆದೇಶ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪುರಸ್ಕರಿಸಿ ಮುಂದಿನ ಪ್ರಕ್ರಿಯೆಗೆ ಅವಕಾಶ ನೀಡಬೇಕು ಎಂದು ಪ್ರಾಸಿಕ್ಯೂಷನ್ ಪರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದರು.
ಆದರೆ, ನಟ ದರ್ಶನ್ ಪರ ವಕೀಲ ಹಷ್ಮತ್ ಪಾಷಾ ಅವರು ಪ್ರದೋಷ್ ಅವರ ಮಾಫಿ ಸಾಕ್ಷಿ ಅರ್ಜಿಯನ್ನು ಸ್ವೀಕರಿಸಬಾರದು ಎಂದು ನ್ಯಾಯಾಲಯದಲ್ಲಿ ಪ್ರತಿವಾದಿಸಿದ್ದರು.
ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಲಯ ಇದೀಗ ಪ್ರದೋಷ್ ಅವರ ಮಾಫಿ ಸಾಕ್ಷಿ ಅರ್ಜಿಯನ್ನು ಪುರಸ್ಕರಿಸಿದೆ. ಇದರೊಂದಿಗೆ ಪ್ರಕರಣದ ತನಿಖೆ ಮತ್ತು ಮುಂದಿನ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಪ್ರದೋಷ್ ಅವರ ಹೇಳಿಕೆಗಳು ಮಹತ್ವ ಪಡೆದುಕೊಳ್ಳುವ ಸಾಧ್ಯತೆ ಇದೆ.
ಪ್ರದೋಷ್ ಮಾಫಿ ಸಾಕ್ಷಿಯಾಗಲು ಅವಕಾಶ ದೊರೆತಿರುವುದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಅವರಿಂದ ಲಭ್ಯವಾಗುವ ಮಾಹಿತಿ ಹಾಗೂ ಹೇಳಿಕೆಗಳು ಮುಂದಿನ ವಿಚಾರಣೆಯಲ್ಲಿ ಯಾವ ರೀತಿಯ ಪರಿಣಾಮ ಬೀರುತ್ತವೆ ಎಂಬುದು ಕುತೂಹಲ ಮೂಡಿಸಿದೆ.
ಮತ್ತೊಂದೆಡೆ, ಪ್ರದೋಷ್ ಮಾಫಿ ಸಾಕ್ಷಿಯಾಗಿರುವ ಬೆಳವಣಿಗೆ ಪ್ರಕರಣದಲ್ಲಿ ನಟ ದರ್ಶನ್ ಪರ ನಡೆಯುತ್ತಿರುವ ಕಾನೂನು ಹೋರಾಟದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಮುಂದಿನ ವಿಚಾರಣೆಯಲ್ಲಿ ಈ ಬೆಳವಣಿಗೆ ಮತ್ತಷ್ಟು ಮಹತ್ವ ಪಡೆಯುವ ನಿರೀಕ್ಷೆಯಿದೆ.



