ಜಮೀರ್ ದೇಶಪ್ರೇಮದ ಬಗ್ಗೆ ಪ್ರಶ್ನಿಸುವಂತಿಲ್ಲ: ಪತ್ರದ ಶಬ್ದ ಹಿಡಿದು ರಾಜಕೀಯ ಮಾಡುವುದು ಸರಿಯಲ್ಲ – ಯು.ಟಿ. ಖಾದರ್
ಮಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ದೇಶಪ್ರೇಮದ ಬಗ್ಗೆ ಯಾರೂ ಪ್ರಶ್ನಿಸುವಂತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ನಗರದ ನೆಹರೂ ಮೈದಾನದಲ್ಲಿ ಶನಿವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಮೀರ್ ಅಹ್ಮದ್ ಖಾನ್ ಅವರ ಕಾರ್ಯಕ್ರಮದ ಗೈರುಹಾಜರಿ ಕುರಿತು ಸ್ಪಷ್ಟನೆ ನೀಡಿದರು.
ಜಮೀರ್ ಅಹ್ಮದ್ ಖಾನ್ ಅವರು ದೇಶದ ಅತ್ಯಂತ ಸತ್ಪ್ರಜೆಯಾಗಿದ್ದು, ಎಲ್ಲ ಸಂದರ್ಭಗಳಲ್ಲೂ ಸೌಹಾರ್ದತೆ ಹಾಗೂ ದೇಶಪ್ರೇಮವನ್ನು ಎತ್ತಿಹಿಡಿದಿದ್ದಾರೆ ಎಂದು ಯು.ಟಿ. ಖಾದರ್ ಹೇಳಿದರು.
ಕೆಲವು ಕಾರಣಗಳಿಂದಾಗಿ ಜಮೀರ್ ಅಹ್ಮದ್ ಖಾನ್ ಅವರಿಗೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ. ಆ ಪತ್ರದ ಹಿಂದಿರುವ ಭಾವನೆ ಮತ್ತು ಉದ್ದೇಶವನ್ನು ಅರ್ಥಮಾಡಿಕೊಳ್ಳಬೇಕು. ಪತ್ರದಲ್ಲಿರುವ ಒಂದೆರಡು ಶಬ್ದಗಳನ್ನು ಹಿಡಿದುಕೊಂಡು ಅಪಾರ್ಥ ಕಲ್ಪಿಸಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಅವರು ತಿಳಿಸಿದರು.
ಸರ್ಕಾರ ಜಮೀರ್ ಅವರ ಪತ್ರವನ್ನು ಒಪ್ಪಿಕೊಂಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖಾದರ್, ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂಬ ನಿರೀಕ್ಷೆಯಲ್ಲೇ ಅವರನ್ನು ಕಾರ್ಯಕ್ರಮಕ್ಕೆ ನಿಯೋಜಿಸಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಅವರಿಗೆ ಹಾಜರಾಗಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪತ್ರ ಬರೆದಿದ್ದಾರೆ. ಹೀಗಾಗಿ ಅವರ ಬದಲಿಗೆ ಬೇರೆಯವರನ್ನು ಕಾರ್ಯಕ್ರಮಕ್ಕೆ ನಿಯೋಜಿಸಲಾಗಿದೆ ಎಂದು ಹೇಳಿದರು.
ಈ ವಿಚಾರವನ್ನು ದೊಡ್ಡದು ಮಾಡಿ ರಾಜಕೀಯ ಮಾಡುವುದು ಬೇಡ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ದೇಶದ ಪ್ರತಿಯೊಬ್ಬರಲ್ಲೂ ದೇಶಪ್ರೇಮವಿದೆ ಎಂದು ಯು.ಟಿ. ಖಾದರ್ ಹೇಳಿದರು.
ಇದೇ ವೇಳೆ ಖಾತೆ ಹಂಚಿಕೆ ಹಾಗೂ ಸಚಿವ ಸ್ಥಾನಕ್ಕೆ ಸಂಬಂಧಿಸಿದ ಅಸಮಾಧಾನದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿ, ಎಐಸಿಸಿ ಅಧ್ಯಕ್ಷರು ಹಾಗೂ ಪಕ್ಷದ ಮುಖಂಡರು ಎಲ್ಲರೊಂದಿಗೆ ಚರ್ಚಿಸಿಯೇ ತೀರ್ಮಾನಗಳನ್ನು ಕೈಗೊಂಡಿದ್ದಾರೆ. ಎಲ್ಲ ನಾಯಕರ ಒಪ್ಪಿಗೆಗೆ ಅನುಗುಣವಾಗಿಯೇ ನಿರ್ಧಾರಗಳು ನಡೆದಿವೆ. ನಮ್ಮಲ್ಲಿ ಯಾವುದೇ ಅಪಸ್ವರಗಳಿಲ್ಲ, ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.



