ಬೆಂಗಳೂರಲ್ಲಿ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು; 20 ಪೊಲೀಸರ ಭದ್ರತೆಯಲ್ಲಿ ಮಾಲ್ದಾಗೆ ಪ್ರಯಾಣ
ಬೆಂಗಳೂರು: ಬೆಂಗಳೂರಿನ ವಿವಿಧೆಡೆ ಅಕ್ರಮವಾಗಿ ವಾಸವಿದ್ದ ಆರೋಪದ ಮೇಲೆ ಬಂಧಿಸಲಾಗಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಗಡಿಪಾರು ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ. ನಗರದ ವಿವಿಧ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬಂಧಿಸಲಾಗಿದ್ದ 31 ಮಂದಿಯನ್ನು ಸೋಮವಾರ ಬೆಳಗಿನ ಜಾವ ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿನಿಂದ ಪಶ್ಚಿಮ ಬಂಗಾಳದ ಮಾಲ್ದಾಗೆ ಕರೆದೊಯ್ಯಲಾಗಿದೆ.
ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ಮೂಲಕ 31 ಬಾಂಗ್ಲಾದೇಶಿ ಪ್ರಜೆಗಳು ರೈಲಿನಲ್ಲಿ ಪ್ರಯಾಣ ಬೆಳೆಸಿದ್ದು, ಅವರ ಭದ್ರತೆಗಾಗಿ ಒಟ್ಟು 20 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಪೊಲೀಸ್ ಭದ್ರತೆಯಲ್ಲಿ ಪ್ರಯಾಣಿಸುತ್ತಿರುವ ತಂಡವು ಮಂಗಳವಾರ ಸಂಜೆ ಸುಮಾರು 5 ಗಂಟೆಗೆ ಮಾಲ್ದಾ ರೈಲು ನಿಲ್ದಾಣ ತಲುಪುವ ನಿರೀಕ್ಷೆಯಿದೆ. ಮಾಲ್ದಾ ತಲುಪಿದ ಬಳಿಕ ಅಲ್ಲಿನ ಅಧಿಕಾರಿಗಳ ಮೂಲಕ ಮುಂದಿನ ಗಡಿಪಾರು ಪ್ರಕ್ರಿಯೆ ನಡೆಯಲಿದೆ.
ಬೆಂಗಳೂರಿನಲ್ಲಿ ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವ ಕಾರ್ಯಾಚರಣೆ ಮುಂದುವರಿದಿದ್ದು, ಇದೇ ಪ್ರಕ್ರಿಯೆಯ ಭಾಗವಾಗಿ 31 ಬಾಂಗ್ಲಾದೇಶಿ ಪ್ರಜೆಗಳನ್ನು ಬೆಂಗಳೂರಿನಿಂದ ಪಶ್ಚಿಮ ಬಂಗಾಳದ ಗಡಿ ಭಾಗಕ್ಕೆ ಕಳುಹಿಸಲಾಗಿದೆ.
ಪೊಲೀಸರು ಅಕ್ರಮ ವಲಸಿಗರ ಕುರಿತು ಮಾಹಿತಿ ಲಭ್ಯವಾದಲ್ಲಿ ಕಾನೂನುಬದ್ಧವಾಗಿ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳದೆ, ಯಾವುದೇ ಅನುಮಾನಾಸ್ಪದ ವ್ಯಕ್ತಿಗಳ ಕುರಿತು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.



